ಚಿಕ್ಕಮಗಳೂರು: ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷಕ್ಕೆ ಮತ್ತಷ್ಟು ಬಲ ತುಂಬುವ ಬೆಳವಣಿಗೆ ನಡೆದಿದ್ದು, ಚಿಕ್ಕಮಗಳೂರು ಹಾಗೂ ಮೂಡಿಗೆರೆ ತಾಲೂಕಿನ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷದ 200ಕ್ಕೂ ಅಧಿಕ ಕಾರ್ಯಕರ್ತರು ಜೆಡಿಎಸ್ ಸೇರ್ಪಡೆಯಾಗಲು ಸಜ್ಜಾಗಿದ್ದಾರೆ.
2023ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ನ ಆಕಾಂಕ್ಷಿಯಾಗಿದ್ದ ಬಿಜೆಪಿ ಮುಖಂಡ ವಿಜಯ್ ಕುಮಾರ್ ಅವರ ನೇತೃತ್ವದಲ್ಲಿ ಈ ಸೇರ್ಪಡೆ ನಡೆಯಲಿದೆ. ಬಿಜೆಪಿ ಯುವ ಮೋರ್ಚಾದ ಮಂಡಲ ಹಾಗೂ ವಿವಿಧ ಹಂತದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಜೆಡಿಎಸ್ ಸೇರ್ಪಡೆಯಾಗಲಿದ್ದಾರೆ.
ಇದರ ಜೊತೆಗೆ ಭಜರಂಗದಳದ ಮಾಜಿ ಜಿಲ್ಲಾ ಸಂಚಾಲಕ, ಕಟ್ಟರ್ ಹಿಂದೂವಾದಿ ಎಂದು ಗುರುತಿಸಿಕೊಂಡಿರುವ ತುಡುಕೂರು ಮಂಜು ಕೂಡ ಜೆಡಿಎಸ್ ಸೇರ್ಪಡೆಯಾಗಲಿದ್ದಾರೆ. ಯೂತ್ ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷ ಮಂಜು ಸೇರಿದಂತೆ ಹಲವು ಕಾಂಗ್ರೆಸ್ ಕಾರ್ಯಕರ್ತರು ಕೂಡ ಜೆಡಿಎಸ್ನತ್ತ ಹೆಜ್ಜೆ ಹಾಕಲಿದ್ದಾರೆ.
ನಾಳೆ ಬೆಂಗಳೂರಿನಲ್ಲಿ ಸೇರ್ಪಡೆ
ಚಿಕ್ಕಮಗಳೂರು ಹಾಗೂ ಮೂಡಿಗೆರೆ ತಾಲೂಕಿನ 500ಕ್ಕೂ ಅಧಿಕ ಕಾರ್ಯಕರ್ತರು ನಾಳೆ ಬೆಂಗಳೂರಿಗೆ ತೆರಳಲಿದ್ದು, ಜೆಡಿಎಸ್ ಕಚೇರಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ 200ಕ್ಕೂ ಅಧಿಕ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರು ಅಧಿಕೃತವಾಗಿ ಜೆಡಿಎಸ್ ಸೇರ್ಪಡೆಯಾಗಲಿದ್ದಾರೆ.
ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಜೆಡಿಎಸ್ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹಾಗೂ ಭೋಜೇಗೌಡ ಅವರ ನೇತೃತ್ವದಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆಯಲಿದೆ.
ಕೈ-ಕಮಲದ ಪ್ರಮುಖ ಮುಖಂಡರು ಹಾಗೂ ಕಾರ್ಯಕರ್ತರು ಜೆಡಿಎಸ್ ಸೇರ್ಪಡೆಯಾಗುತ್ತಿರುವುದು ಚಿಕ್ಕಮಗಳೂರು ಜಿಲ್ಲೆಯ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.


