मौसम क्रिकेट ऑपरेशन सिंदूर क्रिकेट स्पोर्ट्स बॉलीवुड जॉब - एजुकेशन बिजनेस लाइफस्टाइल देश विदेश राशिफल आध्यात्मिक अन्य

ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ಫರ್ನಿಚರ್ ಅಂಗಡಿ

 

ಚಿಕ್ಕಮಗಳೂರು ನಗರದ ಐಜಿ ರಸ್ತೆಯಲ್ಲಿ ಇರುವ ಫರ್ನಿಚರ್ ಅಂಗಡಿಯಲ್ಲಿ ಅಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲೇ ವ್ಯಾಪಕವಾಗಿ ಹರಡಿದೆ. ಅಂಗಡಿಯಲ್ಲಿ ಸಂಗ್ರಹಿಸಿದ್ದ ಹಾಸಿಗೆ, ಬೀರು, ಕುಷನ್, ಸೋಫಾಸೆಟ್, ದಿವಾನ್ ಕಾಟ್ ಸೇರಿದಂತೆ ಬಹುತೇಕ ಫರ್ನಿಚರ್ ವಸ್ತುಗಳು ಬೆಂಕಿಗಾಹುತಿಯಾಗಿವೆ.

ಸ್ಥಳೀಯರು ಹಾಗೂ ಅಂಗಡಿ ಮಾಲೀಕರು ಸಾಧ್ಯವಾದಷ್ಟು ವಸ್ತುಗಳನ್ನು ಹೊರತೆಗೆದು ರಸ್ತೆಗೆ ಇಡುವ ಮೂಲಕ ಹಾನಿಯನ್ನು ಕಡಿಮೆ ಮಾಡಲು ಪ್ರಯತ್ನಿಸಿದ್ದಾರೆ. ಆದರೆ ಹಾಸಿಗೆ ಮತ್ತು ಕುಷನ್‌ಗಳಂತಹ ಸುಲಭವಾಗಿ ಹೊತ್ತಿ ಉರಿಯುವ ವಸ್ತುಗಳಿದ್ದ ಬೆಂಕಿ ವೇಗವಾಗಿ ವ್ಯಾಪಿಸಿದೆ.

ಇಡೀ ರಾತ್ರಿ ಸಾಧಾರಣ ಮಳೆಯಾಗಿದ್ದ ಹಿನ್ನೆಲೆಯಲ್ಲಿ ದೊಡ್ಡ ಮಟ್ಟದ ಅನಾಹುತ ತಪ್ಪಿದಂತಾಗಿದೆ ಎಂದು ಹೇಳಲಾಗಿದೆ. ಮಾಹಿತಿ ಪಡೆದ ತಕ್ಷಣ ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಿದ್ದಾರೆ.

ಘಟನಾ ಸ್ಥಳದಲ್ಲಿ ಎರಡು ಅಗ್ನಿಶಾಮಕ ವಾಹನಗಳನ್ನು ನಿಯೋಜಿಸಲಾಗಿದ್ದು, ಪರಿಸ್ಥಿತಿಯನ್ನು ಸಂಪೂರ್ಣ ನಿಯಂತ್ರಣಕ್ಕೆ ತರಲಾಗಿದೆ. ಐಜಿ ರಸ್ತೆ ನಗರದಲ್ಲಿನ ಪ್ರಮುಖ ರಸ್ತೆ ಆಗಿರುವುದರಿಂದ ಕೆಲ ಕಾಲ ವಾಹನ ಸಂಚಾರಕ್ಕೂ ಅಡಚಣೆ ಉಂಟಾಯಿತು.

ಹಾಸನ: ಪರೀಕ್ಷೆ ಮುಗಿಸಿ ಮನೆಗೆ ಮರಳುತ್ತಿದ್ದ ವಿದ್ಯಾರ್ಥಿ ಕಾರು ಡಿಕ್ಕಿಯಾಗಿ ಸಾವು

ಹೊಳೆನರಸೀಪುರ: ಶಾಲೆಯಲ್ಲಿ ವಾರ್ಷಿಕ ಪರೀಕ್ಷೆ ಮುಗಿಸಿ ಸಂತಸದಿಂದ ಮನೆಗೆ ಮರಳುತ್ತಿದ್ದ ಬಾಲಕನೊಬ್ಬ ಅತಿವೇಗವಾಗಿ ಬಂದ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಕಾಮಸಮುದ್ರ ಗ್ರಾಮದಲ್ಲಿ ನಡೆದಿದೆ.

​ಮೃತ ವಿದ್ಯಾರ್ಥಿಯನ್ನು ಕಾಮಸಮುದ್ರ ಗ್ರಾಮದ ಚಿರಂತ್ ಗೌಡ (14 ವರ್ಷ) ಎಂದು ಗುರುತಿಸಲಾಗಿದೆ. ಈತ ಸ್ಥಳೀಯ ಶಾಲೆಯಲ್ಲಿ 8ನೇ ತರಗತಿ ವ್ಯಾಸಂಗ ಮಾಡುತ್ತಿದ್ದನು. ಇಂದು ಪರೀಕ್ಷೆ ಮುಗಿಸಿ ರಸ್ತೆಯಲ್ಲಿ ನಡೆದುಕೊಂಡು ಮನೆಗೆ ಹೋಗುತ್ತಿದ್ದಾಗ, ಚಾಲಕನ ಅಜಾಗರೂಕತೆಯಿಂದ ಬಂದ ಕಾರು ಬಾಲಕನಿಗೆ ಜೋರಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಚಿರಂತ್ ಗೌಡ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ.

​ಚಾಲಕನ ಬೇಜವಾಬ್ದಾರಿಯೇ ಈ ಸಾವಿಗೆ ನೇರ ಕಾರಣ ಎಂದು ಮೃತ ಬಾಲಕನ ಪೋಷಕರು ಮತ್ತು ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮುದ್ದಿನ ಮಗನನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದ್ದು, 

ತೆರಿಗೆ‌ ಇಳಿಸಿದ್ರೆ ಖುಷಿ ಪಡೋ ವಿಚಾರ, ಆದರೆ, ಕಾಂಗ್ರೆಸ್ ಸಂಕಟ ಪಡುತ್ತಿದೆ ಸಿ.ಟಿ.ರವಿ

ಚಿಕ್ಕಮಗಳೂರು: ಇಂಧನ ತೆರಿಗೆ ಇಳಿಕೆ ಕುರಿತು ಕೇಂದ್ರ ಸರ್ಕಾರದ ನಿರ್ಧಾರಕ್ಕೆ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿರುವ ವೇಳೆ, ಕಾಂಗ್ರೆಸ್ ಪಕ್ಷದ ನಡೆಗೆ ಟೀಕೆಗಳು ಕೇಳಿಬರುತ್ತಿವೆ ಎಂದು ಪರಿಷತ್ ಸದಸ್ಯ ಸಿ.ಟಿ. ರವಿ ಹೇಳಿದ್ದಾರೆ.
ಚಿಕ್ಕಮಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ತೆರಿಗೆ ಇಳಿಕೆಯಿಂದ ಜನರು ಸಂತೋಷಗೊಂಡಿದ್ದಾರೆ. ಆದರೆ ಕಾಂಗ್ರೆಸ್ ಇದನ್ನು ಸ್ವಾಗತಿಸುವ ಬದಲು ಸಂಕಟಪಡುತ್ತಿರುವುದು ವಿಷಾದನೀಯ ಎಂದು ಹೇಳಿದರು. ಯುದ್ಧ ಪರಿಸ್ಥಿತಿಯ ಪರಿಣಾಮ ಜನಸಾಮಾನ್ಯರಿಗೆ ತಟ್ಟಬಾರದೆಂಬ ಉದ್ದೇಶದಿಂದ ಪ್ರಧಾನಮಂತ್ರಿ ನರೇಂದ್ರ ಮೋದಿ ತೆರಿಗೆ ಇಳಿಕೆ ಮಾಡಿದ್ದಾರೆ ಎಂದು ಹೇಳಿದರು.

ಡಿಸಿಎಂ ಹಾಗೂ ಕಾಂಗ್ರೆಸ್ ನಾಯಕರ ಹೇಳಿಕೆಗಳನ್ನು ಗಮನಿಸಿದ್ದೇನೆ. ಜನರ ಬಗ್ಗೆ ನಿಜವಾದ ಕಾಳಜಿ ಇದ್ದಿದ್ದರೆ ಅವರು ಈ ನಿರ್ಧಾರವನ್ನು ಸ್ವಾಗತಿಸಬೇಕಾಗಿತ್ತು. ಬೆಲೆ ಇಳಿದರೂ ವಿರೋಧಿಸುವುದು ಕಾಂಗ್ರೆಸ್‌ನ ನಿಲುವು ಎಂಬುದು ಸ್ಪಷ್ಟವಾಗುತ್ತದೆ. ಜನರಿಗೆ ಖುಷಿ ತಂದ ವಿಚಾರಗಳೇ ಕಾಂಗ್ರೆಸ್‌ಗೆ ಸಂಕಟವಾಗುತ್ತಿವೆ ಎಂದು ಟೀಕಿಸಿದರು.
ಉಪಚುನಾವಣೆ ಫಲಿತಾಂಶಗಳ ಕುರಿತು ಮಾತನಾಡಿದ ಅವರು, ಉಪಚುನಾವಣೆಗಳು ತಕ್ಷಣ ಸರ್ಕಾರದ ಮೇಲೆ ಪರಿಣಾಮ ಬೀರುವುದಿಲ್ಲ. ಆದರೆ ಜನರ ಭಾವನೆಗಳನ್ನು ವ್ಯಕ್ತಪಡಿಸುವ ವೇದಿಕೆಯಾಗಿವೆ. ಕಾಂಗ್ರೆಸ್ ಸೋತರೆ ಸರ್ಕಾರ ಬೀಳುವುದಿಲ್ಲ, ಆದರೆ ಜನರಿಂದ ಒಂದು ಸ್ಪಷ್ಟ ಸಂದೇಶ ಹೋಗುತ್ತದೆ ಎಂದರು.
ರಾಜ್ಯದಲ್ಲಿ ಭ್ರಷ್ಟಾಚಾರ, ಅಭಿವೃದ್ಧಿಯ ಕೊರತೆ ಹಾಗೂ ಬೆಲೆ ಏರಿಕೆ ವಿಷಯಗಳಲ್ಲಿ ಜನ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ ಎಂದರು.

ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ ಭಾರೀ ಮಳೆಯಿಂದ ಮೂಡಿಗೆರೆ ತಾಲೂಕಿನಾದ್ಯಂತ ನಾನಾ ಅವಾಂತರ

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ಇಂದು ದಿಢೀರನೆ ಆರಂಭವಾದ ಭಾರೀ ಮಳೆ ಮತ್ತು ಗಾಳಿಯಿಂದ ಜನಜೀವನ ಅಸ್ತವ್ಯಸ್ತವಾಗಿದೆ. ಕಾಫಿನಾಡು ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ ಸುರಿದ ಪರಿಣಾಮ ಹಲವೆಡೆ ಅನಾಹುತಗಳು ಸಂಭವಿಸಿವೆ.
ಮೂಡಿಗೆರೆ ತಾಲೂಕಿನ ವಿವಿಧ ಪ್ರದೇಶಗಳಲ್ಲಿ ಗಾಳಿಯ ತೀವ್ರತೆಗೆ ರಸ್ತೆ ಬದಿ ನಿಲ್ಲಿಸಿದ್ದ ಕಾರಿನ ಮೇಲೆ ಮರ ಬಿದ್ದು ಕಾರು ಜಖಂಗೊಂಡಿದೆ. ಕಾರಿನೊಳಗೆ ಯಾರೂ ಇಲ್ಲದ ಕಾರಣ ದೊಡ್ಡ ಅಪಾಯ ತಪ್ಪಿದೆ.
ಇನ್ನೂ ಹಲವೆಡೆ ಭಾರೀ ಗಾಳಿಯಿಂದ ತೆಂಗಿನ ಮರಗಳು ರಸ್ತೆಗೆ ಅಡ್ಡವಾಗಿ ಬಿದ್ದಿದ್ದು, ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಒಂದು ಸ್ಥಳದಲ್ಲಿ ಬೃಹತ್ ತೆಂಗಿನ ಮರ ವಿದ್ಯುತ್ ತಂತಿಗಳ ಮೇಲೆ ಬಿದ್ದು ಅಪಾಯಕಾರಿಯಾಗಿ ನಿಂತಿರುವುದು ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿದೆ.
ಮೂಡಿಗೆರೆ ಪಟ್ಟಣದ ಹೈಸ್ಕೂಲಿನ ಮೇಲ್ಛಾವಣಿಯ ಹೆಂಚುಗಳು ಗಾಳಿಯ ಬಿರುಗಾಳಿಗೆ ಹಾರಿ ಹೋಗಿವೆ. ಬಿದರಹಳ್ಳಿ ಗ್ರಾಮದಲ್ಲಿ ಗಾಳಿ-ಮಳೆಯ ಅಬ್ಬರಕ್ಕೆ ಮನೆಯ ಮೇಲ್ಛಾವಣಿ ಹಾರಿ ಹೋಗಿದ್ದು, ಆಸ್ತಿ ನಷ್ಟ ಸಂಭವಿಸಿದೆ.
ಪಟ್ಟಣದ ಹಲವೆಡೆ ಗಾಳಿ-ಮಳೆಯ ತೀವ್ರತೆಗೆ ವಾಹನಗಳು ನಿಂತಲ್ಲೇ ನಿಂತಿರುವ ದೃಶ್ಯ ಕಂಡುಬಂದಿದೆ. ಚಾರ್ಮಾಡಿ ಘಾಟ್ ತಪ್ಪಲಿನ ಕೊಟ್ಟಿಗೆಹಾರ ಭಾಗದಲ್ಲೂ ಭಾರೀ ಮಳೆ ಸುರಿಯುತ್ತಿದ್ದು, ಮಲೆನಾಡು ಪ್ರದೇಶದ ಜನತೆ ಕಂಗಾಲಾಗಿದ್ದಾರೆ.
 

ಸಿ.ಟಿ. ರವಿ ಮಾನನಷ್ಟ ಮೊಕದ್ದಮೆ: ಚಿಕ್ಕಮಗಳೂರು ನ್ಯಾಯಾಲಯಕ್ಕೆ ಹಾಜರು, ಹೇಳಿಕೆ ದಾಖಲು

 

ಚಿಕ್ಕಮಗಳೂರು: ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಅವರು ತಮ್ಮ ವಿರುದ್ಧ ನೀಡಿದ್ದ ವಿವಾದಾತ್ಮಕ ಹೇಳಿಕೆಗಳನ್ನು ಪ್ರಶ್ನಿಸಿ ಬಿಜೆಪಿ ನಾಯಕ ಹಾಗೂ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರು ಹೂಡಿದ್ದ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ, ಇಂದು ಅವರು ನಗರದ ನ್ಯಾಯಾಲಯಕ್ಕೆ ಹಾಜರಾಗಿ ತಮ್ಮ ಹೇಳಿಕೆಯನ್ನು ದಾಖಲಿಸಿದ್ದಾರೆ.

2022ರಲ್ಲಿ ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಅವರು ಸಿ.ಟಿ. ರವಿ ಅವರ ವಿರುದ್ಧ ‘ಅಕ್ರಮ ಆಸ್ತಿ’ ಮತ್ತು ‘ಲೂಟಿ ರವಿ’ ಎಂಬ ಪದಗಳನ್ನು ಬಳಸುವ ಮೂಲಕ ಗಂಭೀರ ಆರೋಪಗಳನ್ನು ಮಾಡಿದ್ದರು. ಈ ಹೇಳಿಕೆಗಳು ತಮ್ಮ ಘನತೆಗೆ ಕುಂದು ತಂದಿವೆ ಎಂದು ಆರೋಪಿಸಿ ಸಿ.ಟಿ. ರವಿ ಅವರು ಚಿಕ್ಕಮಗಳೂರಿನ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.

ನಗರದ 2ನೇ ಜೆಎಂಎಫ್‌ಸಿ (JMFC) ನ್ಯಾಯಾಲಯಕ್ಕೆ ಇಂದು ಭೇಟಿ ನೀಡಿದ ಸಿ.ಟಿ. ರವಿ, ನ್ಯಾಯಾಧೀಶರಾದ ಅನುರಾಧ ಹೆಚ್.ಟಿ. ಅವರ ಮುಂದೆ ದೂರುದಾರರ ಹೇಳಿಕೆಯನ್ನು ಅಧಿಕೃತವಾಗಿ ದಾಖಲಿಸಿದರು. ಕೆಪಿಸಿಸಿ ವಕ್ತಾರರ ವಿರುದ್ಧ ಕಾನೂನು ಹೋರಾಟ ಮುಂದುವರಿಸುವುದಾಗಿ ಈ ಸಂದರ್ಭದಲ್ಲಿ ಅವರು ಸ್ಪಷ್ಟಪಡಿಸಿದರು.

ದೂರುದಾರರ ಹೇಳಿಕೆ ದಾಖಲಿಸಿಕೊಂಡ ನ್ಯಾಯಾಲಯವು ಪ್ರಕರಣದ ಮುಂದಿನ ವಿಚಾರಣೆಯನ್ನು ಜೂನ್ 6ಕ್ಕೆ ಮುಂದೂಡಿ ಆದೇಶ ಹೊರಡಿಸಿದೆ.

ಸಿಬಿಐ ಅಧಿಕಾರಿ ಸೋಗಿನಲ್ಲಿ ಬೆದರಿಕೆ ಹಾಕಿ ವೃದ್ಧನಿಂದ ಲಕ್ಷಾಂತರ ರೂಪಾಯಿ ದೋಚಿದ ಸೈಬರ್ ವಂಚಕರು

 

 

ರಾಜ್ಯದಲ್ಲಿ ಸೈಬರ್ ಅಪರಾಧ ಪ್ರಕರಣಗಳು ಗಣನೀಯವಾಗಿ ಹೆಚ್ಚುತ್ತಿದ್ದು, ಡಿಜಿಟಲ್ ಅರೆಸ್ಟ್ ಎಂಬ ಹೊಸ ತಂತ್ರದ ಮೂಲಕ ಚಿಕ್ಕಮಗಳೂರಿನ ಕಡೂರು ತಾಲೂಕಿನ ಆಸಂದಿ ಗ್ರಾಮದ ವೃದ್ಧರೊಬ್ಬರಿಗೆ ಲಕ್ಷಾಂತರ ರೂಪಾಯಿ ವಂಚಿಸಿರುವುದು ಬೆಳಕಿಗೆ ಬಂದಿದೆ. 71 ವರ್ಷದ ಎ.ಆರ್. ಲೋಕೇಶಪ್ಪ ಅವರಿಗೆ ಅಪರಿಚಿತ ಸಂಖ್ಯೆಯಿಂದ ಕರೆ ಮಾಡಿದ ವ್ಯಕ್ತಿ, ತಾನು ಸಿಬಿಐ ಅಧಿಕಾರಿಯೆಂದು ಪರಿಚಯಿಸಿಕೊಂಡು ನರೇಶ್ ಗೋಯೆಲ್ ಪ್ರಕರಣದಲ್ಲಿ ನೀವು ಭಾಗಿಯಾಗಿದ್ದೀರಿ ಎಂದು ಭಯ ಹುಟ್ಟಿಸಿದ್ದಾನೆ. ನಂತರ ವಂಚಕರು ಅವರನ್ನು ಒಂದು ಕೊಠಡಿಯಿಂದ ಹೊರಬಾರದಂತೆ ಹಾಗೂ ಯಾರೊಂದಿಗೂ ಮಾತನಾಡದಂತೆ ಬೆದರಿಸಿ ಮಾನಸಿಕವಾಗಿ ಕುಗ್ಗಿಸಿದ್ದಾರೆ. ಪ್ರಕರಣದ ತನಿಖೆ ಮುಗಿಯುವವರೆಗೆ ನಿಮ್ಮ ಬ್ಯಾಂಕ್ ಖಾತೆಯಲ್ಲಿರುವ ಹಣವನ್ನು ಭಾರತೀಯ ರಿಸರ್ವ್ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಬೇಕೆಂದು ನಂಬಿಸಿ, ಲೋಕೇಶಪ್ಪ ಅವರಿಂದ ಹಂತ ಹಂತವಾಗಿ ಒಟ್ಟು 48.50 ಲಕ್ಷ ರೂಪಾಯಿಯನ್ನು ಪಂಗನಾಮ ಹಾಕಿದ್ದಾರೆ. ಈ ಬಗ್ಗೆ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಯಾವುದೇ ಸರ್ಕಾರಿ ಅಧಿಕಾರಿಗಳು ಫೋನ್ ಮೂಲಕ ಹಣ ವರ್ಗಾವಣೆಗೆ ಕೇಳುವುದಿಲ್ಲವಾದ್ದರಿಂದ ಸಾರ್ವಜನಿಕರು ಇಂತಹ ಬೆದರಿಕೆ ಕರೆಗಳಿಗೆ ಕಿವಿಗೊಡಬಾರದು ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

ಆಟೋ LPG ದರ ಏಕಾಏಕಿ ಏರಿಕೆ – ಬಂಕ್ ವಿರುದ್ಧ ಚಾಲಕರ ಆಕ್ರೋಶ

ಚಿಕ್ಕಮಗಳೂರು: ಚಿಕ್ಕಮಗಳೂರಿನಲ್ಲಿ ಆಟೋ ಎಲ್‌ಪಿಜಿ ದರದಲ್ಲಿ ಏಕಾಏಕಿ ಭಾರೀ ಏರಿಕೆ ಕಂಡುಬಂದಿದ್ದು, ಆಟೋ ಚಾಲಕರ ಆಕ್ರೋಶಕ್ಕೆ ಕಾರಣವಾಗಿದೆ.

ಮಲ್ಲಂದೂರು ರಸ್ತೆಯಲ್ಲಿರುವ ಗೋ ಗ್ಯಾಸ್ ಆಟೋ ಎಲ್‌ಪಿಜಿ ಬಂಕ್‌ನಲ್ಲಿ ಮಧ್ಯಾಹ್ನ 12 ಗಂಟೆಯವರೆಗೆ ₹85 ಇದ್ದ ದರ, ಕೇವಲ ಕೆಲವು ಗಂಟೆಗಳಲ್ಲೇ ಮಧ್ಯಾಹ್ನ 3 ಗಂಟೆಗೆ ₹99.5ಕ್ಕೆ ಏರಿಕೆಯಾಗಿದೆ. ಈ ದಿಢೀರ್ ದರ ಏರಿಕೆ ಚಾಲಕರಿಗೆ ಆಘಾತ ಉಂಟುಮಾಡಿದೆ.

ದರ ಏರಿಕೆಗೆ ಸಂಬಂಧಿಸಿದಂತೆ ಯಾವುದೇ ಅಧಿಕೃತ ಸರ್ಕಾರಿ ಆದೇಶವನ್ನು ಪ್ರದರ್ಶಿಸದಿರುವುದರಿಂದ, ಬಂಕ್ ಮಾಲೀಕರು ಕೃತಕ ಅಭಾವ ಸೃಷ್ಟಿಸಿ ದರ ಹೆಚ್ಚಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. “ಸ್ಟಾಕ್ ಇದ್ದರೂ ದರ ಹೆಚ್ಚಿಸಲಾಗಿದೆ” ಎಂದು ಆಟೋ ಚಾಲಕರು ಆರೋಪಿಸಿದ್ದಾರೆ.

ಆಕ್ರೋಶಗೊಂಡ ಚಾಲಕರು ಬಂಕ್‌ಗೆ ಆಗಮಿಸಿ ಮ್ಯಾನೇಜರ್‌ರನ್ನು ತರಾಟೆಗೆ ತೆಗೆದುಕೊಂಡು, ಹಳೆಯ ದರದಲ್ಲೇ ಗ್ಯಾಸ್ ನೀಡುವಂತೆ ಒತ್ತಾಯಿಸಿದರು. “ಸರ್ಕಾರದ ಆದೇಶವನ್ನು ತೋರಿಸಿ ಅಥವಾ ಹಳೆಯ ದರದಲ್ಲೇ ನೀಡಿ” ಎಂದು ಅವರು ಪಟ್ಟು ಹಿಡಿದರು.

ಹಳೆಯ ದರಕ್ಕೆ ಗ್ಯಾಸ್ ನೀಡದಿದ್ದಲ್ಲಿ, ಜಿಲ್ಲೆಯಾದ್ಯಂತ ವ್ಯಾಪಕ ಪ್ರತಿಭಟನೆ ನಡೆಸುವುದಾಗಿ ಆಟೋ ಚಾಲಕರು ಎಚ್ಚರಿಕೆ ನೀಡಿದ್ದಾರೆ.

ಚಿಕ್ಕಮಗಳೂರು: ಡೆತ್ ನೋಟ್ ಬರೆದಿಟ್ಟು ಸಹಕಾರ ಸಂಘದ ಕಾರ್ಯದರ್ಶಿ ಆತ್ಮಹತ್ಯೆ; 9 ಜನರ ವಿರುದ್ಧ ಎಫ್‌ಐಆರ್

 

​ತರೀಕೆರೆ: ಕ್ಷುಲ್ಲಕ ಕಾರಣಕ್ಕೆ ಮಾನಸಿಕ ಕಿರುಕುಳ ಹಾಗೂ ಅವಮಾನಕ್ಕೊಳಗಾದ ಹಾಲು ಉತ್ಪಾದಕರ ಸಹಕಾರ ಸಂಘದ ಕಾರ್ಯದರ್ಶಿಯೊಬ್ಬರು ಸುದೀರ್ಘ ಡೆತ್ ನೋಟ್ ಹಾಗೂ ವಿಡಿಯೋ ರೆಕಾರ್ಡ್ ಮಾಡಿ ಆತ್ಮಹತ್ಯೆ ಮಾಡಿಕೊಂಡಿರುವ ಮನಕಲಕುವ ಘಟನೆ ತರೀಕೆರೆ ತಾಲೂಕಿನ ಹೆಚ್.ಮಲ್ಲೇನಹಳ್ಳಿ ಗ್ರಾಮದಲ್ಲಿ ಸಂಭವಿಸಿದೆ.

ಹೆಚ್.ಮಲ್ಲೇನಹಳ್ಳಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ 2010 ರಿಂದ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದ ಉಷಾ (45) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಮೃತರು ಆತ್ಮಹತ್ಯೆಗೂ ಮುನ್ನ 3 ಪುಟಗಳ ಸುದೀರ್ಘ ಡೆತ್ ನೋಟ್ ಹಾಗೂ ಸುಮಾರು 25 ನಿಮಿಷಗಳ ಸುದೀರ್ಘ ವಿಡಿಯೋವನ್ನು ಚಿತ್ರೀಕರಿಸಿದ್ದು, ತಮ್ಮ ಸಾವಿಗೆ ಕಾರಣವಾದ ಅಂಶಗಳನ್ನು ವಿವರಿಸಿದ್ದಾರೆ.

ಸಂಘಕ್ಕೆ ಹೊಸ ಕಮಿಟಿ ಬಂದ ಮೇಲೆ ಹಳೆಯ ಲೆಕ್ಕಪತ್ರಗಳ ವಿಚಾರವಾಗಿ ಉಷಾ ಅವರಿಗೆ ತೀವ್ರ ಕಿರುಕುಳ ನೀಡಲಾಗುತ್ತಿತ್ತು ಎನ್ನಲಾಗಿದೆ. “2020ರ ಕೆಲಸಕ್ಕೆ ಈಗ ಬಿಲ್ ಕೇಳುತ್ತಿದ್ದಾರೆ, ಅದನ್ನು ಎಲ್ಲಿಂದ ತರಲಿ? ಹಣ ದುರುಪಯೋಗವಾಗಿದೆ ಎಂದು ಸುಳ್ಳು ಆರೋಪ ಮಾಡಿ ಕೋರ್ಟ್, ಪೊಲೀಸ್ ಎಂದು ಹೆದರಿಸಲಾಗುತ್ತಿದೆ” ಎಂದು ಅವರು ಪತ್ರದಲ್ಲಿ ಅಳಲು ತೋಡಿಕೊಂಡಿದ್ದಾರೆ.

ಚಿಕ್ಕಮಗಳೂರು ಎಸ್ಪಿ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ

ಚಿಕ್ಕಮಗಳೂರು ಜಿಲ್ಲೆಯ ಪೊಲೀಸ್ ಅಧೀಕ್ಷಕರಾದ ಜಿತೇಂದ್ರ ಕುಮಾರ್ ದಯ್ಮಾ ಅವರ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ ಸೃಷ್ಟಿಸಿರುವ ಘಟನೆ ಬೆಳಕಿಗೆ ಬಂದಿದೆ.
ಕಿಡಿಗೇಡಿಗಳು ಜಿತೇಂದ್ರ ಕುಮಾರ್ ದಯ್ಮಾ ಅವರ ಹೆಸರನ್ನೇ ಬಳಸಿಕೊಂಡು ಫೇಸ್ಬುಕ್ ಖಾತೆಯನ್ನು ತೆರೆಯಲಾಗಿದ್ದು, ಚಿಕ್ಕಮಗಳೂರು ಪೊಲೀಸ್ ಇಲಾಖೆಗೆ ಸಂಬಂಧಿಸಿದ ಮಾಹಿತಿಗಳನ್ನು ಪೋಸ್ಟ್ ಮಾಡುತ್ತಿರುವುದು ಗಮನಕ್ಕೆ ಬಂದಿದೆ. ಈ ಖಾತೆ ಜಿತೇಂದ್ರ ಕುಮಾರ್ ದಯ್ಮಾ ಅವರು ಚಿಕ್ಕಮಗಳೂರು ಜಿಲ್ಲೆಯ ಎಸ್ಪಿಯಾಗಿ ವರ್ಗಾವಣೆಯಾದ ಬಳಿಕವೇ ಕ್ರಿಯೇಟ್ ಆಗಿರುವುದು ಶಂಕೆಗೆ ಕಾರಣವಾಗಿದೆ.
ಈ ನಕಲಿ ಖಾತೆಯ ಮೂಲಕ ಸಾರ್ವಜನಿಕರನ್ನು ತಪ್ಪುದಾರಿಗೆಳೆಯುವ ಸಾಧ್ಯತೆ ಇರುವುದರಿಂದ, ಪೊಲೀಸರು ಎಚ್ಚರಿಕೆ ವಹಿಸಲು ಸೂಚನೆ ನೀಡಿದ್ದಾರೆ. ಅಲ್ಲದೆ, ಈ ಕುರಿತು ಮಾಹಿತಿ ತಿಳಿದ ಕೂಡಲೇ ಎಸ್ಪಿ ಜಿತೇಂದ್ರ ಕುಮಾರ್ ದಯ್ಮಾ ಅವರು ತಕ್ಷಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ಪೊಲೀಸ್ ಇಲಾಖೆ ಈಗಾಗಲೇ ಈ ನಕಲಿ ಫೇಸ್ಬುಕ್ ಖಾತೆಯ ಮೂಲವನ್ನು ಪತ್ತೆಹಚ್ಚಲು ತನಿಖೆ ಆರಂಭಿಸಿದ್ದು, ಸಂಬಂಧಪಟ್ಟ ಕಿಡಿಗೇಡಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಸಿದ್ಧತೆ ನಡೆಸಿದೆ.

ಚಾಲಕನ ಅಜಾಗರೂಕತೆಗೆ ಪಲ್ಟಿಯಾದ ಪಿಕಪ್; ಸಾವಿನ ದವಡೆಯಿಂದ ಇಬ್ಬರು ಪಾರು 

 

 

 

ನರಸಿಂಹರಾಜಪುರ ತಾಲೂಕಿನ ಶೆಟ್ಟಿಕೊಪ್ಪ ಗ್ರಾಮದ ಬಳಿ ಅಪಘಾತವೊಂದು ಸಂಭವಿಸಿದ್ದು, ಅತಿ ವೇಗವಾಗಿ ಬಂದ ಪಿಕಪ್ ವಾಹನವೊಂದು ರಸ್ತೆಯ ಪಕ್ಕದ ಮನೆಯ ಕಾಂಪೌಂಡ್‌ಗೆ ಗುದ್ದಿ ಪಲ್ಟಿಯಾಗಿದೆ. ಎನ್.ಆರ್.ಪುರ ಕಡೆಯಿಂದ ಬಂದ ಈ ವಾಹನದ ಚಾಲಕನಿಗೆ ವೇಗದ ಮೇಲೆ ನಿಯಂತ್ರಣ ತಪ್ಪಿದ್ದೇ ಈ ಘಟನೆಗೆ ಪ್ರಮುಖ ಕಾರಣವಾಗಿದ್ದು, ಡಿಕ್ಕಿಯ ರಭಸಕ್ಕೆ ಮನೆಯ ಮುಂಭಾಗದ ಗೇಟ್ ಹಾಗೂ ಕಾಂಪೌಂಡ್ ಸಂಪೂರ್ಣವಾಗಿ ಜಖಂಗೊಂಡಿದೆ. ಅದೃಷ್ಟವಶಾತ್ ವಾಹನದಲ್ಲಿದ್ದ ಇಬ್ಬರು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದು, ಅಪಘಾತದ ಸಮಯದಲ್ಲಿ ರಸ್ತೆಯಲ್ಲಿ ಯಾರೂ ಇಲ್ಲದ ಕಾರಣ ಭೀಕರ ದುರಂತವೊಂದು ತಪ್ಪಿದಂತಾಗಿದೆ. ಪಿಕಪ್ ವಾಹನವು ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಸ್ಥಳೀಯರು ಅಪಘಾತದ ತೀವ್ರತೆಯನ್ನು ಕಂಡು ದಂಗಾಗಿದ್ದಾರೆ.