ಹಾಸನ: ತಾವು ಕಷ್ಟಪಟ್ಟು ಬೆಳೆದ ತಂಬಾಕು ಬೆಳೆಗೆ ಸೂಕ್ತ ಬೆಂಬಲ ಬೆಲೆ ನೀಡದ ಅಧಿಕಾರಿಗಳ ಹಾಗೂ ಸರ್ಕಾರದ ಕ್ರಮವನ್ನು ಖಂಡಿಸಿ ನೂರಾರು ತಂಬಾಕು ಬೆಳೆಗಾರರು ನಡುರಸ್ತೆಯಲ್ಲಿ ಬೃಹತ್ ಪ್ರತಿಭಟನೆ ನಡೆಸಿದ ಘಟನೆ ಹಾಸನ ಜಿಲ್ಲೆ ಅರಕಲಗೂಡು ತಾಲೂಕಿನ ರಾಮನಾಥಪುರದಲ್ಲಿ ನಡೆದಿದೆ.
ಬೆಂಬಲ ಬೆಲೆ ಸಿಗದೆ ಕಂಗೆಟ್ಟಿರುವ ನೂರಾರು ರೈತರು ಏಕಾಏಕಿ ರಸ್ತೆಗಿಳಿದು ಹೋರಾಟದ ಹಾದಿ ಹಿಡಿದಿದ್ದಾರೆ. ನಡುರಸ್ತೆಯಲ್ಲಿಯೇ ತಂಬಾಕು ಬ್ಯಾರೆಲ್ಗಳನ್ನು ತಂದಿಟ್ಟು, ಅವುಗಳಿಗೆ ಬೆಂಕಿ ಹಚ್ಚುವ ಮೂಲಕ ತಮ್ಮ ತೀವ್ರ ಆಕ್ರೋಶವನ್ನು ಹೊರಹಾಕಿದರು. ರಸ್ತೆಯ ಮಧ್ಯೆ ತಂಬಾಕು ಹೊತ್ತಿ ಉರಿದ ಪರಿಣಾಮ ಸ್ಥಳದಲ್ಲಿ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.
ಸೂಕ್ತ ಬೆಲೆ ಕಲ್ಪಿಸುವಲ್ಲಿ ವಿಫಲರಾಗಿರುವ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ವಿರುದ್ಧ ಪ್ರತಿಭಟನಾ ನಿರತ ರೈತರು ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. “ನಾವು ಹಗಲಿರುಳು ಕಷ್ಟಪಟ್ಟು ಬೆಳೆದ ಬೆಳೆಗೆ ಕನಿಷ್ಠ ಬೆಂಬಲ ಬೆಲೆಯೂ ಸಿಗುತ್ತಿಲ್ಲ, ಅಧಿಕಾರಿಗಳು ನಮ್ಮ ನೆರವಿಗೆ ಬರುತ್ತಿಲ್ಲ” ಎಂದು ರೈತರು ಕಿಡಿಕಾರಿದರು.
ಕಳೆದ ಕೆಲವು ಸಮಯದಿಂದ ಮಾರುಕಟ್ಟೆಯಲ್ಲಿ ತಂಬಾಕಿಗೆ ನಿರೀಕ್ಷಿತ ಬೆಲೆ ಸಿಗದೆ ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸರ್ಕಾರ ಹಾಗೂ ತಂಬಾಕು ಮಂಡಳಿ ಕೂಡಲೇ ಮಧ್ಯಪ್ರವೇಶಿಸಿ, ತಂಬಾಕಿಗೆ ವೈಜ್ಞಾನಿಕ ಹಾಗೂ ಯೋಗ್ಯ ಬೆಂಬಲ ಬೆಲೆಯನ್ನು ನಿಗದಿಪಡಿಸಬೇಕು ಎಂದು ಆಗ್ರಹಿಸಿದರು. ಬೇಡಿಕೆ ಈಡೇರದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವುದಾಗಿ ರೈತರು ಎಚ್ಚರಿಕೆ ನೀಡಿದ್ದಾರೆ.
















Leave a Reply