ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಹಾಂದಿ ಸಮೀಪದ ಸತ್ತಿಹಳ್ಳಿ ಗ್ರಾಮದಲ್ಲಿ ಕಾಡಾನೆಗಳ ದಾಳಿ ಆತಂಕವನ್ನು ಉಂಟುಮಾಡಿದೆ. ಇತ್ತೀಚಿನ ದಿನಗಳಲ್ಲಿ ಮಲೆನಾಡು ಭಾಗದಲ್ಲಿ ಕಾಡಾನೆಗಳ ಸಂಚಾರ ಹೆಚ್ಚಾಗಿದ್ದು, ಇದೀಗ ಅವು ಗ್ರಾಮ ಪ್ರದೇಶಗಳಿಗೂ ಪ್ರವೇಶಿಸುತ್ತಿವೆ.
ಸತ್ತಿಹಳ್ಳಿ ಗ್ರಾಮದಲ್ಲಿ ಎರಡು ಕಾಡಾನೆಗಳು ಗ್ರಾಮ ರಸ್ತೆಯಲ್ಲಿ ಸಂಚರಿಸುತ್ತಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಗೊಂಡಿದೆ. ಈ ಆನೆಗಳು ಮನೆಗಳ ಅಂಗಳಕ್ಕೆ ನುಗ್ಗಿ ಕಾಂಪೌಂಡ್ ಗೋಡೆಗಳನ್ನು ಧ್ವಂಸಗೊಳಿಸಿದ್ದು, ಸ್ಥಳೀಯರಲ್ಲಿ ಭೀತಿ ಉಂಟುಮಾಡಿವೆ.
ಕೃಷ್ಣ ಎಂಬವರಿಗೆ ಸೇರಿದ ಕಾಫಿ ನರ್ಸರಿಯಲ್ಲಿ ಕಾಡಾನೆಗಳು ದಾಂದಲೆ ನಡೆಸಿ ಲಕ್ಷಾಂತರ ಮೌಲ್ಯದ ಗಿಡಗಳನ್ನು ನಾಶಪಡಿಸಿವೆ. ಕಾಫಿ ಹಾಗೂ ಅಡಿಕೆ ತೋಟಗಳಿಗೂ ಹಾನಿ ಉಂಟಾಗಿದೆ ಎಂದು ತಿಳಿದುಬಂದಿದೆ.
ಘಟನೆಯ ಹಿನ್ನೆಲೆಯಲ್ಲಿ ಮೂಡಿಗೆರೆ ಮತ್ತು ಆಲ್ದೂರು ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗ್ರಾಮದಲ್ಲಿ ಕಾಡಾನೆಗಳು ಸಂಚರಿಸುತ್ತಿರುವುದರಿಂದ ರಾತ್ರಿ ವೇಳೆಯಲ್ಲಿ ಅನವಶ್ಯಕವಾಗಿ ಹೊರಗೆ ತಿರುಗಾಡಬಾರದು ಎಂದು ಗ್ರಾಮಸ್ಥರಿಗೆ ಎಚ್ಚರಿಕೆ ನೀಡಲಾಗಿದೆ.















Leave a Reply