ಚಿಕ್ಕಮಗಳೂರು: ವಿವಾದಿತ ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾದಲ್ಲಿ ಜಿಯಾರತ್ ಮತ್ತು ಫಾತೇಹಾ ಆಚರಣೆಗಳಿಗೆ ಜಿಲ್ಲಾಡಳಿತ ಅನುಮತಿ ನಿರಾಕರಿಸಿರುವುದು ಮುಸ್ಲಿಮರ ಕೆಂಗಣ್ಣಿಗೆ ಗುರಿಯಾಗಿದೆ. ಈ ಹಿಂದೆ ಮುಕ್ತವಾಗಿರುತ್ತಿದ್ದ ಖಬರಸ್ಥಾನ್ ಗೇಟನ್ನು ಈ ಬಾರಿ ಜಿಲ್ಲಾಡಳಿತ ಸಂಪೂರ್ಣವಾಗಿ ಬಂದ್ ಮಾಡಿದ್ದು, ಸಮಾಧಿಗಳ ಬಳಿ ಪ್ರಾರ್ಥನೆ ಸಲ್ಲಿಸಲು ಮತ್ತು ಪೂಜೆ ನೆರವೇರಿಸಲು ಅವಕಾಶ ನೀಡಿಲ್ಲ. ಸರ್ಕಾರದ ಈ ಕ್ರಮದ ವಿರುದ್ಧ ಮುಸ್ಲಿಂ ಸಮುದಾಯ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಈ ಕುರಿತು ಮುಂಚಿತವಾಗಿಯೇ ಮಾಹಿತಿ ನೀಡಿದ್ದರೂ ಸಹ ಜಿಲ್ಲಾಡಳಿತವು ಇವುಗಳನ್ನು ಹೊಸ ಆಚರಣೆಗಳೆಂದು ಪರಿಗಣಿಸಿ ತಡೆ ಹಿಡಿದಿರುವುದು ಪ್ರತಿಭಟನೆಗೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ದತ್ತಪೀಠದ ಆವರಣದಲ್ಲಿ ಸಮುದಾಯದ ಮುಖಂಡರು ಸುಮಾರು ಮೂರು ಗಂಟೆಗಳ ಕಾಲ ಧರಣಿ ನಡೆಸಿ ತಮ್ಮ ಆಕ್ರೋಶ ಹೊರಹಾಕಿದ್ದಾರೆ. ಮುಂದಿನ ದಿನಗಳಲ್ಲಿ ಯಾವುದೇ ಅಡಚಣೆ ಇಲ್ಲದೆ ಜಿಯಾರತ್ ನಡೆಸಲು ಅವಕಾಶ ನೀಡಬೇಕೆಂದು ಅವರು ಆಗ್ರಹಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರಾದ ರಾಮಲಿಂಗಾರೆಡ್ಡಿ, ಜಮೀರ್ ಅಹಮದ್ ಹಾಗೂ ಜಿಲ್ಲಾಧಿಕಾರಿ ಮತ್ತು ಎಸ್ಪಿಯವರಿಗೆ ಈಗಾಗಲೇ ದೂರು ಸಲ್ಲಿಸಿ ನ್ಯಾಯ ಒದಗಿಸುವಂತೆ ಮನವಿ ಮಾಡಲಾಗಿದೆ.














Leave a Reply