ರಾಜ್ಯದಲ್ಲಿ ಸೈಬರ್ ಅಪರಾಧ ಪ್ರಕರಣಗಳು ಗಣನೀಯವಾಗಿ ಹೆಚ್ಚುತ್ತಿದ್ದು, ಡಿಜಿಟಲ್ ಅರೆಸ್ಟ್ ಎಂಬ ಹೊಸ ತಂತ್ರದ ಮೂಲಕ ಚಿಕ್ಕಮಗಳೂರಿನ ಕಡೂರು ತಾಲೂಕಿನ ಆಸಂದಿ ಗ್ರಾಮದ ವೃದ್ಧರೊಬ್ಬರಿಗೆ ಲಕ್ಷಾಂತರ ರೂಪಾಯಿ ವಂಚಿಸಿರುವುದು ಬೆಳಕಿಗೆ ಬಂದಿದೆ. 71 ವರ್ಷದ ಎ.ಆರ್. ಲೋಕೇಶಪ್ಪ ಅವರಿಗೆ ಅಪರಿಚಿತ ಸಂಖ್ಯೆಯಿಂದ ಕರೆ ಮಾಡಿದ ವ್ಯಕ್ತಿ, ತಾನು ಸಿಬಿಐ ಅಧಿಕಾರಿಯೆಂದು ಪರಿಚಯಿಸಿಕೊಂಡು ನರೇಶ್ ಗೋಯೆಲ್ ಪ್ರಕರಣದಲ್ಲಿ ನೀವು ಭಾಗಿಯಾಗಿದ್ದೀರಿ ಎಂದು ಭಯ ಹುಟ್ಟಿಸಿದ್ದಾನೆ. ನಂತರ ವಂಚಕರು ಅವರನ್ನು ಒಂದು ಕೊಠಡಿಯಿಂದ ಹೊರಬಾರದಂತೆ ಹಾಗೂ ಯಾರೊಂದಿಗೂ ಮಾತನಾಡದಂತೆ ಬೆದರಿಸಿ ಮಾನಸಿಕವಾಗಿ ಕುಗ್ಗಿಸಿದ್ದಾರೆ. ಪ್ರಕರಣದ ತನಿಖೆ ಮುಗಿಯುವವರೆಗೆ ನಿಮ್ಮ ಬ್ಯಾಂಕ್ ಖಾತೆಯಲ್ಲಿರುವ ಹಣವನ್ನು ಭಾರತೀಯ ರಿಸರ್ವ್ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಬೇಕೆಂದು ನಂಬಿಸಿ, ಲೋಕೇಶಪ್ಪ ಅವರಿಂದ ಹಂತ ಹಂತವಾಗಿ ಒಟ್ಟು 48.50 ಲಕ್ಷ ರೂಪಾಯಿಯನ್ನು ಪಂಗನಾಮ ಹಾಕಿದ್ದಾರೆ. ಈ ಬಗ್ಗೆ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಯಾವುದೇ ಸರ್ಕಾರಿ ಅಧಿಕಾರಿಗಳು ಫೋನ್ ಮೂಲಕ ಹಣ ವರ್ಗಾವಣೆಗೆ ಕೇಳುವುದಿಲ್ಲವಾದ್ದರಿಂದ ಸಾರ್ವಜನಿಕರು ಇಂತಹ ಬೆದರಿಕೆ ಕರೆಗಳಿಗೆ ಕಿವಿಗೊಡಬಾರದು ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.














Leave a Reply