ಮೂಡಿಗೆರೆ: ಕೂಲಿ ಕೆಲಸಕ್ಕಾಗಿ ಮಲೆನಾಡಿಗೆ ಬಂದು ಸ್ಥಳೀಯವಾಗಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುತ್ತಿರುವ ಅಸ್ಸಾಂ ಮೂಲದ ವಲಸೆ ಕಾರ್ಮಿಕರ ನಡೆ ಈಗ ಜಿಲ್ಲೆಯಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಈ ಬೆನ್ನಲ್ಲೇ ಮೂಡಿಗೆರೆ ತಾಲೂಕಿನಲ್ಲಿ ಅಪ್ರಾಪ್ತ ಬಾಲಕಿಯ ಅಪಹರಣ ಮತ್ತು ಮತಾಂತರ ಯತ್ನದ ಆರೋಪ ಕೇಳಿಬಂದಿದ್ದು, ಮಲೆನಾಡಿನಲ್ಲಿ ಮತ್ತೆ ‘ಲವ್ ಜಿಹಾದ್’ ಆತಂಕ ಎದುರಾಗಿದೆ.
ಮೂಡಿಗೆರೆ ತಾಲೂಕಿನ ಬಾಳೂರು ಪೊಲೀಸ್ ಠಾಣಾ ವ್ಯಾಪ್ತಿಯ ಕಾಫಿ ತೋಟವೊಂದರಲ್ಲಿ ಕೆಲಸ ಮಾಡುತ್ತಿದ್ದ ಅಸ್ಸಾಂ ಮೂಲದ ಯುವಕ ಹಬೀವರ್ ಇಸ್ಲಾಂ ಎಂಬಾತ, ಅದೇ ತೋಟದಲ್ಲಿ ಕೆಲಸಕ್ಕಿದ್ದ ಮಧ್ಯಪ್ರದೇಶ ಮೂಲದ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ, ಮತಾಂತರಕ್ಕೆ ಯತ್ನಿಸಿದ್ದಾನೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಸದ್ಯ ನೊಂದ ಬಾಲಕಿ ನೀಡಿದ ದೂರಿನನ್ವಯ ಬಾಳೂರು ಪೊಲೀಸ್ ಠಾಣೆಯಲ್ಲಿ ಆರೋಪಿ ಹಬೀವರ್ ಇಸ್ಲಾಂ ವಿರುದ್ಧ ಪ್ರಕರಣ ದಾಖಲಾಗಿದೆ.
ಕೂಲಿ ಅರಸಿ ಕರ್ನಾಟಕಕ್ಕೆ, ಅದರಲ್ಲೂ ವಿಶೇಷವಾಗಿ ಕಾಫಿ ನಾಡಿಗೆ ಬರುತ್ತಿರುವ ಇವರು ಕೇವಲ ಅಸ್ಸಾಂ ಮೂಲದವರಲ್ಲ, ಬದಲಿಗೆ ಅಕ್ರಮ ಬಾಂಗ್ಲಾದೇಶಿ ನಿವಾಸಿಗಳು ಎಂಬ ಬಲವಾದ ಆರೋಪಗಳು ಕೇಳಿಬರುತ್ತಿವೆ. ಅಸ್ಸಾಂ ಹೆಸರಿನಲ್ಲಿ ಬಂದು ಇಲ್ಲಿನ ಮಲೆನಾಡಿನ ಶಾಂತಿಯುತ ವಾತಾವರಣವನ್ನು ಹಾಳುಗೆಡವುತ್ತಿದ್ದಾರೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.
ಹಿಂದೂ ಸಂಘಟನೆಗಳ ಆಕ್ರೋಶ – ತನಿಖೆಗೆ ಒತ್ತಾಯ:
ವಿಷಯ ತಿಳಿಯುತ್ತಿದ್ದಂತೆ ಶ್ರೀರಾಮಸೇನಾ ನೇತೃತ್ವದಲ್ಲಿ ಹಿಂದೂ ಸಂಘಟನೆಗಳ ಪ್ರಮುಖರು ಬಾಳೂರು ಪೊಲೀಸ್ ಠಾಣೆಗೆ ಧಾವಿಸಿ, ಸೂಕ್ತ ತನಿಖೆ ನಡೆಸುವಂತೆ ಒತ್ತಾಯಿಸಿ ದೂರು ನೀಡಿದ್ದಾರೆ. ಶ್ರೀರಾಮಸೇನೆಯ ಪ್ರಮೋದ್ ಮುತಾಲಿಕ್, ಸ್ಥಳೀಯ ಮುಖಂಡರಾದ ಸುಂದರೇಶ್ ಹಾಗೂ ಇನ್ನಿತರ ನಾಯಕರು ಈ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದು, ಮಲೆನಾಡು ಭಾಗದಲ್ಲಿ ಲವ್ ಜಿಹಾದ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.
ಹಿಂದೂ ಸಂಘಟನೆಗಳ ಪ್ರಮುಖ ಬೇಡಿಕೆಗಳು:
ಜಿಲ್ಲೆಗೆ ಬರುವ ವಲಸೆ ಕಾರ್ಮಿಕರ ಹಿನ್ನೆಲೆ ಹಾಗೂ ದಾಖಲೆಗಳ ಕುರಿತು ಸರ್ಕಾರ ಮತ್ತು ಪೊಲೀಸ್ ಇಲಾಖೆ ತಕ್ಷಣವೇ ತೀವ್ರ ನಿಗಾ ವಹಿಸಬೇಕು.
ಈ ಪ್ರಕರಣದ ಬಗ್ಗೆ ಸಮಗ್ರ ಮತ್ತು ಪಾರದರ್ಶಕ ತನಿಖೆಯಾಗಬೇಕು.
ಒಂದು ವೇಳೆ ಸಂತ್ರಸ್ತೆಗೆ ನ್ಯಾಯ ಸಿಗದಿದ್ದರೆ ಮುಂಬರುವ ದಿನಗಳಲ್ಲಿ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಬಾಳೂರು ಪೊಲೀಸರು ತನಿಖೆಯನ್ನು ಕೈಗೆತ್ತಿಕೊಂಡಿದ್ದು, ವಲಸೆ ಕಾರ್ಮಿಕರ ಈ ಕೃತ್ಯದ ವಿರುದ್ಧ ಮಲೆನಾಡಿನಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ.
















Leave a Reply