ಚಿಕ್ಕಮಗಳೂರು: ನಗರದ ಎ.ಐ.ಟಿ. ವೃತ್ತದ ಬಳಿ ಇರುವ ಎಂ.ಇ.ಎಸ್. (MES) ಖಾಸಗಿ ಶಾಲೆಯಲ್ಲಿ ಇಂದು ಹಮ್ಮಿಕೊಳ್ಳಲಾಗಿದ್ದ ಈದ್ ಮಿಲಾದ್ ಆಚರಣೆಗೆ ಪೋಷಕರು ಹಾಗೂ ಹಿಂದೂ ಸಂಘಟನೆಗಳ ಕಾರ್ಯಕರ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ. ತೀವ್ರ ವಿರೋಧದ ಹಿನ್ನೆಲೆಯಲ್ಲಿ ಶಾಲಾ ಆಡಳಿತ ಮಂಡಳಿಯು ಈದ್ ಮಿಲಾದ್ ಕಾರ್ಯಕ್ರಮವನ್ನು ರದ್ದುಗೊಳಿಸಿದೆ.
ಶಾಲೆಯಲ್ಲಿ ಇಂದು ಈದ್ ಮಿಲಾದ್ ಆಚರಣೆ ನಡೆಯಲಿದೆ ಎಂದು ಆಡಳಿತ ಮಂಡಳಿಯು ವಾಟ್ಸಪ್ ಗ್ರೂಪ್ನಲ್ಲಿ ಸಂದೇಶ ಕಳುಹಿಸಿತ್ತು. ಅಲ್ಲದೆ, ವಿದ್ಯಾರ್ಥಿಗಳಿಗೆ ‘ಜುಬ್ಬಾ’ ಧರಿಸಿ ಶಾಲೆಗೆ ಬರುವಂತೆ ಸೂಚನೆ ನೀಡಲಾಗಿತ್ತು ಎನ್ನಲಾಗಿದೆ. ಈ ವಿಷಯ ತಿಳಿಯುತ್ತಿದ್ದಂತೆ ಆಕ್ರೋಶಗೊಂಡ ವಿದ್ಯಾರ್ಥಿಗಳ ಪೋಷಕರು ಮತ್ತು ಹಿಂದೂ ಸಂಘಟನೆಗಳ ಕಾರ್ಯಕರ್ತರು ಶಾಲೆಯ ಮುಂಭಾಗ ಜಮಾಯಿಸಿ ಧರಣಿ ನಡೆಸಿದರು.
ಶಿಕ್ಷಕರಿಗೆ ಕ್ಲಾಸ್ ತಗೆದುಕೊಂಡ ಕಾರ್ಯಕರ್ತರು:
ಖಾಸಗಿ ಶಾಲೆಯಲ್ಲಿ ಈದ್ ಆಚರಣೆ ಮಾಡುವ ಅಗತ್ಯವೇನಿತ್ತು? ಯಾವ ಕಾರಣಕ್ಕಾಗಿ ಈ ಆಚರಣೆ ಮಾಡಲಾಗುತ್ತಿದೆ ಎಂದು ಶಿಕ್ಷಕರು ಹಾಗೂ ಆಡಳಿತ ಮಂಡಳಿಯನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು ತೀವ್ರವಾಗಿ ಪ್ರಶ್ನಿಸಿ ತರಾಟೆಗೆ ತೆಗೆದುಕೊಂಡರು. ಯಾವುದೇ ಕಾರಣಕ್ಕೂ ಶಾಲೆಯಲ್ಲಿ ಈದ್ ಮಿಲಾದ್ ಆಚರಣೆ ನಡೆಯಬಾರದು ಎಂದು ಪಟ್ಟು ಹಿಡಿದರು.
ಘಟನೆಯ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪರಿಸ್ಥಿತಿ ಗಂಭೀರತೆ ಅರಿತ ಶಾಲಾ ಆಡಳಿತ ಮಂಡಳಿಯು ತಕ್ಷಣವೇ ಈದ್ ಮಿಲಾದ್ ಕಾರ್ಯಕ್ರಮವನ್ನು ರದ್ದುಗೊಳಿಸಿರುವುದಾಗಿ ಘೋಷಿಸಿತು. ಇದರಿಂದಾಗಿ ಸ್ಥಳದಲ್ಲಿದ್ದ ಉದ್ವಿಗ್ನ ವಾತಾವರಣ ತಿಳಿಯಾಯಿತು. ಘಟನೆಯು ಚಿಕ್ಕಮಗಳೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.


