ಚಿಕ್ಕಮಗಳೂರು: ಮಲೆನಾಡಿನಲ್ಲಿ ಕಸ್ತೂರಿ ರಂಗನ್ ವರದಿ ಜಾರಿ ಹಾಗೂ ಪರಿಸರ ಸೂಕ್ಷ್ಮ ವಲಯದ ವಿಚಾರವಾಗಿ ಆತಂಕ ಮುಂದುವರಿದಿರುವ ನಡುವೆಯೇ, ವರದಿಯನ್ನು ವಿರೋಧಿಸಿ ಶೃಂಗೇರಿ ತಾಲೂಕು ಬಂದ್ಗೆ ಕರೆ ನೀಡಲಾಗಿದೆ.
ಶೃಂಗೇರಿ ರೈತ ಒಕ್ಕೂಟ, ವಿವಿಧ ರಾಜಕೀಯ ಪಕ್ಷಗಳು ಹಾಗೂ ಸಂಘಟನೆಗಳ ನೇತೃತ್ವದಲ್ಲಿ ನಾಳೆ ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಶೃಂಗೇರಿ ತಾಲೂಕು ಸಂಪೂರ್ಣ ಬಂದ್ ನಡೆಸಲು ನಿರ್ಧರಿಸಲಾಗಿದೆ. ಬಂದ್ಗೆ ಸಾರ್ವಜನಿಕರು ಹಾಗೂ ವ್ಯಾಪಾರಸ್ಥರು ಸ್ವಯಂಪ್ರೇರಿತವಾಗಿ ಅಂಗಡಿ-ಮುಂಗಟ್ಟುಗಳನ್ನು ಮುಚ್ಚಿ ಬೆಂಬಲ ನೀಡುವಂತೆ ಸಂಘಟನೆಗಳು ಮನವಿ ಮಾಡಿವೆ.
ಬಂದ್ ಹಿನ್ನೆಲೆಯಲ್ಲಿ ಶೃಂಗೇರಿ ಪಟ್ಟಣದಲ್ಲಿ ವಿವಿಧ ಸಂಘಟನೆಗಳ ವತಿಯಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ. ಕಸ್ತೂರಿ ರಂಗನ್ ವರದಿಯಿಂದ ಮಲೆನಾಡಿನ ಜನಜೀವನ, ಕೃಷಿ ಹಾಗೂ ಕಾಫಿ ಬೆಳೆಗಾರರ ಮೇಲೆ ಪರಿಣಾಮ ಬೀರುವ ಆತಂಕವಿದೆ ಎಂದು ಪ್ರತಿಭಟನಾಕಾರರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಕಸ್ತೂರಿ ರಂಗನ್ ವರದಿಗೆ ಮಲೆನಾಡಿನಾದ್ಯಂತ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದ್ದು, ಕಳೆದೊಂದು ತಿಂಗಳಿಂದ ಚಿಕ್ಕಮಗಳೂರು ಜಿಲ್ಲೆಯ ವಿವಿಧ ಭಾಗಗಳಲ್ಲಿ ಪ್ರತಿಭಟನೆಗಳು ನಡೆಯುತ್ತಿವೆ. ವರದಿ ಜಾರಿಯಾದರೆ ಚಿಕ್ಕಮಗಳೂರು ಜಿಲ್ಲೆಯ 137ಕ್ಕೂ ಹೆಚ್ಚು ಗ್ರಾಮಗಳು ಆತಂಕಕ್ಕೆ ಒಳಗಾಗುವ ಸಾಧ್ಯತೆ ಇದೆ ಎಂದು ಸ್ಥಳೀಯ ರೈತರು ಹಾಗೂ ಸಂಘಟನೆಗಳು ಕಳವಳ ವ್ಯಕ್ತಪಡಿಸಿವೆ.
ಮುಖ್ಯಮಂತ್ರಿ ಮಲೆನಾಡಿಗೆ ಭೇಟಿ ನೀಡಿದ ಬೆನ್ನಲ್ಲೇ ಶೃಂಗೇರಿಯಲ್ಲಿ ಬಂದ್ಗೆ ಕರೆ ನೀಡಿರುವುದು ಗಮನ ಸೆಳೆದಿದ್ದು, ನಾಳಿನ ಪ್ರತಿಭಟನೆಗೆ ವಿವಿಧ ಸಂಘಟನೆಗಳು ಸಿದ್ಧತೆ ನಡೆಸಿವೆ.


