ಚಿಕ್ಕಮಗಳೂರು ಜಿಲ್ಲೆಯ ಬಯಲುಸೀಮೆ ಪ್ರದೇಶದಲ್ಲಿ ಬರ ಪರಿಸ್ಥಿತಿ ಪರಿಶೀಲಿಸಲು ಪ್ರವಾಸ ಕೈಗೊಂಡಿದ್ದ ಸಚಿವ ಕೆ.ಜೆ. ಜಾರ್ಜ್ ಅವರ ಬೆಂಗಾವಲು ವಾಹನ ಅಜ್ಜಂಪುರ ಪಟ್ಟಣದಲ್ಲಿ ಅಪಘಾತಕ್ಕೀಡಾಗಿದೆ. ಸಚಿವರು ಅಮೃತ ಮಹಲ್ ತಳಿ ಸಂವರ್ಧನ ಕೇಂದ್ರಕ್ಕೆ ಭೇಟಿ ನೀಡಲು ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಸಚಿವರ ಕಾರಿನ ಮುಂಭಾಗದಲ್ಲಿ ಅತ್ಯಂತ ವೇಗವಾಗಿ ಸಾಗುತ್ತಿದ್ದ ಪೊಲೀಸ್ ಜೀಪ್, ಹಠಾತ್ ಎದುರಾದ ತಿರುವಿನಲ್ಲಿ ಚಾಲಕ ದಿಢೀರನೆ ಬ್ರೇಕ್ ಹಾಕಿದ ಪರಿಣಾಮ ನಿಯಂತ್ರಣ ತಪ್ಪಿದೆ. ವೇಗವಾಗಿ ಸಾಗುತ್ತಿದ್ದ ವಾಹನವು ನೇರವಾಗಿ ಅಮೃತ ಮಹಲ್ ಕೇಂದ್ರದ ಗೇಟ್ ಗೆ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ಭರಕ್ಕೆ ಪೊಲೀಸ್ ಜೀಪಿನ ಮುಂಭಾಗ ನಜ್ಜುಗುಜ್ಜಾಗಿದ್ದು, ವಾಹನಕ್ಕೆ ಹಾನಿಯಾಗಿದೆ. ಚಾಲಕ ಹಾಗೂ ವಾಹನದಲ್ಲಿದ್ದ ಸಿಬ್ಬಂದಿಗೆ ಯಾವುದೇ ರೀತಿಯ ಅಪಾಯ ಸಂಭವಿಸದೇ ಪಾರಾಗಿದ್ದಾರೆ.


