ಚಿಕ್ಕಮಗಳೂರು: ಆಣೂರು ಗ್ರಾಮ ಪಂಚಾಯಿತಿ ನೀರುಗಂಟಿ ಆತ್ಮಹತ್ಯೆ ಪ್ರಕರಣ – ಕೊನೆಗೂ FIR ದಾಖಲು
ಚಿಕ್ಕಮಗಳೂರು ತಾಲೂಕಿನ ಆಣೂರು ಗ್ರಾಮ ಪಂಚಾಯಿತಿಯಲ್ಲಿ ನೀರುಗಂಟಿಯಾಗಿ ಕೆಲಸ ಮಾಡುತ್ತಿದ್ದ ರಮೇಶ್ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಲ್ದೂರು ಪೊಲೀಸರು ಕೊನೆಗೂ FIR ದಾಖಲಿಸಿದ್ದಾರೆ. ಪ್ರಾರಂಭದಲ್ಲಿ ಅಸಹಜ ಮರಣ (UDR) ಪ್ರಕರಣವಾಗಿ ದಾಖಲಿಸಿದ್ದ ಪೊಲೀಸರ ಕ್ರಮದ ವಿರುದ್ಧ ಸಾರ್ವಜನಿಕ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಇದೀಗ ಪ್ರಕರಣಕ್ಕೆ ತಿರುವು ದೊರೆತಿದೆ.
ಮಾರ್ಚ್ 15ರಂದು ತಮ್ಮ ಮನೆಯಲ್ಲಿ ರಮೇಶ್ ಆತ್ಮಹತ್ಯೆಗೆ ಶರಣಾಗಿದ್ದರು. ಈ ವೇಳೆ ಬರೆದಿದ್ದ ಡೆತ್ ನೋಟ್ ಆಧಾರವಾಗಿ ಪೊಲೀಸರು ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 108 ಮತ್ತು 190 ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಈ ಪ್ರಕರಣದಲ್ಲಿ ಆಣೂರು ಗ್ರಾಮ ಪಂಚಾಯಿತಿಯ PDO, ಮಾಜಿ ಅಧ್ಯಕ್ಷರು ಹಾಗೂ ನಾಲ್ವರು ಸದಸ್ಯರು ಸೇರಿದಂತೆ ಒಟ್ಟು 8 ಮಂದಿಯ ವಿರುದ್ಧ FIR ದಾಖಲಿಸಲಾಗಿದೆ. ಜೊತೆಗೆ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಮೇಲೂ ಆರೋಪ ಕೇಳಿಬಂದಿದ್ದು, ಅವರ ಮೇಲೂ ಪ್ರಕರಣ ದಾಖಲಾಗಿದೆ.
ಡೆತ್ ನೋಟ್ನಲ್ಲಿ ಗ್ರಾಮ ಪಂಚಾಯಿತಿಯಲ್ಲಿ ಕೆಲಸ ಮಾಡಲು ಮಾಜಿ ಅಧ್ಯಕ್ಷ ದಿನೇಶ್, ಸತೀಶ್, ಜಗದೀಶ್, ಪ್ರವೀಣ್ ಮತ್ತು ಭಾಸ್ಕರ್ ಅವರಿಂದ ಕಿರುಕುಳ ನೀಡಲಾಗಿದೆ ಎಂದು ಉಲ್ಲೇಖಿಸಲಾಗಿದೆ. ಸಂಬಳ ಸಮಸ್ಯೆಯಿಂದಾಗಿ ಮೈಕ್ರೋ ಫೈನಾನ್ಸ್ ಸಾಲ ತೀರಿಸಲಾಗದೆ, RBLSKS ಹಾಗೂ ಮುತ್ತೂಟ್ ಫೈನಾನ್ಸ್ ಸಿಬ್ಬಂದಿಗಳು ಮನೆಗೆ ಬಂದು ಕಿರುಕುಳ ನೀಡುತ್ತಿದ್ದರು ಎಂಬುದನ್ನೂ ರಮೇಶ್ ಉಲ್ಲೇಖಿಸಿದ್ದಾರೆ. ಜೊತೆಗೆ ಹಣ ಸಂಬಂಧಿತ ವಿಚಾರದಲ್ಲಿ ಬೆದರಿಕೆ ಹಾಕಲಾಗಿದೆ ಎಂದು ಆರೋಪಿಸಲಾಗಿದೆ.
ಆದರೆ, ಪಂಚಾಯತ್ ರಾಜ್ ಆಯುಕ್ತರಾದ ಅರುಂಧತಿ ಚಂದ್ರಶೇಖರ್ ಅವರು ಬಿಡುಗಡೆ ಮಾಡಿದ ಪ್ರಕಟಣೆಯಲ್ಲಿ, 11 ತಿಂಗಳ ಸಂಬಳ ನೀಡಿಲ್ಲ ಎಂಬ ವಿಷಯ ಡೆತ್ ನೋಟ್ನಲ್ಲಿ ಉಲ್ಲೇಖಿಸಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ. ಈ ಕುರಿತು ಕೆಲವು ಮಾಧ್ಯಮ ವರದಿಗಳು ಸತ್ಯಕ್ಕೆ ದೂರವಾಗಿವೆ ಎಂದೂ ತಿಳಿಸಿದ್ದಾರೆ.
ಇದಲ್ಲದೆ, ಡೆತ್ ನೋಟ್ನ ಸಂಪೂರ್ಣ ಮಾಹಿತಿಯನ್ನು ನೀಡದೆ UDR ಪ್ರಕರಣವಾಗಿ ವರದಿ ಸಲ್ಲಿಸಿದ್ದ ಚಿಕ್ಕಮಗಳೂರು ಜಿಲ್ಲಾ ಪಂಚಾಯಿತಿ ಸಿಬ್ಬಂದಿಗಳ ವಿರುದ್ಧವೂ ಆರೋಪ ಕೇಳಿಬಂದಿದೆ. ಹಿರಿಯ ಅಧಿಕಾರಿಗಳಿಗೆ ಸರಿಯಾದ ಮಾಹಿತಿ ನೀಡದೆ ದಾರಿ ತಪ್ಪಿಸಲು ಯತ್ನಿಸಲಾಗಿದೆ ಎಂಬ ಶಂಕೆ ವ್ಯಕ್ತವಾಗಿದೆ.
ಹುಣಸಮಕ್ಕಿ ಗ್ರಾಮದ ನಿವಾಸಿಯಾಗಿದ್ದ ರಮೇಶ್ ಅವರ ಸಾವಿನ ಪ್ರಕರಣ ಇದೀಗ ಗಂಭೀರ ಸ್ವರೂಪ ಪಡೆದುಕೊಂಡಿದ್ದು, ಆಲ್ದೂರು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಚಿಕ್ಕಮಗಳೂರು: ಆಣೂರು ಗ್ರಾಮ ಪಂಚಾಯಿತಿ ನೀರುಗಂಟಿ ಆತ್ಮಹತ್ಯೆ ಪ್ರಕರಣ – ಕೊನೆಗೂ FIR ದಾಖಲು














Leave a Reply