ಚಿಕ್ಕಮಗಳೂರು: ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಬಿಸಿಲ ತಾಪಕ್ಕೆ ಇದೀಗ ಕಾಡ್ಗಿಚ್ಚಿನ ಆತಂಕ ಎದುರಾಗಿದೆ. ನಗರದ ಹೊರವಲಯದ ಮೀಸಲು ಅರಣ್ಯ ಪ್ರದೇಶದಲ್ಲಿ ಆಕಸ್ಮಿಕವಾಗಿ ಕಾಣಿಸಿಕೊಂಡ ಬೆಂಕಿಯಿಂದಾಗಿ ಸುಮಾರು 15 ಎಕರೆಗೂ ಅಧಿಕ ಅರಣ್ಯ ಪ್ರದೇಶ ಬೆಂಕಿಗಾಹುತಿಯಾಗಿದೆ.
ಚಿಕ್ಕಮಗಳೂರು ತಾಲೂಕಿನ ಚುರ್ಚೆಗುಡ್ಡ ಮೀಸಲು ಅರಣ್ಯ ಹಾಗೂ ಹೊಸ ಕೋರ್ಟ್ ಹಿಂಭಾಗದಲ್ಲಿರುವ ನ್ಯಾಯಗಿರಿ ಮೀಸಲು ಅರಣ್ಯ ಪ್ರದೇಶದಲ್ಲಿ ಈ ಘಟನೆ ಸಂಭವಿಸಿದೆ. ಬೇಸಿಗೆಯ ಬಿರು ಬಿಸಿಲಿನಿಂದಾಗಿ ಒಣಗಿದ್ದ ಗಿಡಗಂಟೆಗಳಿಗೆ ಬೆಂಕಿ ತಗುಲಿದ ಪರಿಣಾಮ, ಕ್ಷಣಾರ್ಧದಲ್ಲಿ ಬೆಂಕಿ ಇಡೀ ಗುಡ್ಡಕ್ಕೆ ವ್ಯಾಪಿಸಿದೆ.
ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ. ಅರಣ್ಯ ಪ್ರದೇಶದ ಎತ್ತರದ ಭಾಗಗಳಿಗೆ ವಾಹನಗಳು ಹೋಗಲು ಸಾಧ್ಯವಾಗದ ಕಾರಣ, ಸಿಬ್ಬಂದಿಗಳು ಮರದ ಹಸಿ ಟೊಂಗೆಗಳನ್ನು ಬಳಸಿಯೇ ಬೆಂಕಿ ಆರಿಸಲು ಪ್ರಯತ್ನಿಸಿದ್ದಾರೆ .
”ಬಿಸಿಲ ತೀವ್ರತೆ ಹೆಚ್ಚಿರುವುದರಿಂದ ಬೆಂಕಿ ವೇಗವಾಗಿ ಹರಡುತ್ತಿದೆ. ಗಾಳಿಯ ವೇಗವೂ ಹೆಚ್ಚಿರುವುದು ಕಾರ್ಯಾಚರಣೆಗೆ ಅಡ್ಡಿಯಾಗುತ್ತಿದೆ. ಆದರೂ ಬೆಂಕಿ ನಿಯಂತ್ರಿಸಲು ಪ್ರಯತ್ನ ಮಾಡಲಾಗುತ್ತಿದೆ,”
ಈ ಘಟನೆಯಿಂದಾಗಿ ಅರಣ್ಯದಲ್ಲಿದ್ದ ಅಮೂಲ್ಯ ಗಿಡಮರಗಳು ಹಾಗೂ ಸಣ್ಣಪುಟ್ಟ ವನ್ಯಜೀವಿಗಳಿಗೆ ಹಾನಿಯಾಗಿರುವ ಆತಂಕ ಎದುರಾಗಿದೆ. ಬೆಂಕಿ ಹರಡದಂತೆ ತಡೆಯಲು ಅರಣ್ಯ ಇಲಾಖೆ ಹಾಗೂ ಅಗ್ನಿಶಾಮಕ ದಳ ಜಂಟಿಯಾಗಿ ಕಾರ್ಯನಿರ್ವಹಿಸುತ್ತಿವೆ.














Leave a Reply