ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯಲ್ಲಿ ಕಾಡಾನೆ ಮತ್ತು ಮಾನವ ಸಂಘರ್ಷ ಮುಂದುವರಿದಿದ್ದು, ಜಿ. ಹೊಸಳ್ಳಿ ಗ್ರಾಮದಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಕೂದಲೆಳೆಯ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. 45 ವರ್ಷದ ಗುರುವಮ್ಮ ಎಂಬುವವರು ತಮ್ಮ ತೋಟದಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಕಾಡಾನೆ ಏಕಾಏಕಿ ದಾಳಿ ನಡೆಸಿದ್ದು, ಈ ಘಟನೆಯಲ್ಲಿ ಅವರು ಗಾಯಗೊಂಡಿದ್ದಾರೆ. ತಕ್ಷಣವೇ ಗಾಯಾಳು ಮಹಿಳೆಯನ್ನು ಮೂಡಿಗೆರೆಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಈ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಎರಡು ಕಾಡಾನೆಗಳು ಬೀಡು ಬಿಟ್ಟಿರುವುದು ಸ್ಥಳೀಯರಲ್ಲಿ ತೀವ್ರ ಆತಂಕ ಮೂಡಿಸಿದೆ. ಪದೇ ಪದೇ ನಡೆಯುತ್ತಿರುವ ಆನೆಗಳ ಹಾವಳಿಯಿಂದ ಆಕ್ರೋಶಗೊಂಡಿರುವ ಗ್ರಾಮಸ್ಥರು ಅರಣ್ಯ ಇಲಾಖೆಯ ವಿರುದ್ಧ ಕಿಡಿಕಾರಿದ್ದಾರೆ. ಕಾಡಾನೆಗಳನ್ನು ನಿಯಂತ್ರಿಸಲು ಮತ್ತು ಜನವಸತಿ ಪ್ರದೇಶಕ್ಕೆ ಬರದಂತೆ ತಡೆಯಲು ಇಲಾಖೆಯು ತಕ್ಷಣವೇ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.


