ಭದ್ರಾ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಅಕ್ರಮ ಜೀಪ್ ಸಫಾರಿ: ಆನೆಗೆ ಕಾಟ ಕೊಟ್ಟ ಯುವಕರು 

Spread the love

 

 

 

ಚಿಕ್ಕಮಗಳೂರಿನ ಭದ್ರಾ ಹುಲಿ ಸಂರಕ್ಷಿತ ಪ್ರದೇಶದ ಹೆಬ್ಬೆ ವಲಯದಲ್ಲಿ ಅರಣ್ಯ ಇಲಾಖೆಯ ಕಣ್ಣೆದುರೇ ನಿಯಮಗಳನ್ನು ಗಾಳಿಗೆ ತೂರಿ ಅಕ್ರಮವಾಗಿ ಜೀಪ್ ಸಫಾರಿ ನಡೆಸಿರುವ ಗಂಭೀರ ಆರೋಪ ಕೇಳಿಬಂದಿದೆ. ಖಾಸಗಿ ತೆರೆದ ಜೀಪಿನಲ್ಲಿ ರಾಜಕೀಯ ಪ್ರಭಾವ ಬಳಸಿ ಹುಲಿ ಸಂರಕ್ಷಿತ ಪ್ರದೇಶದೊಳಗೆ ಅಕ್ರಮ ಪ್ರವೇಶ ಪಡೆದಿರುವ ಯುವಕರ ತಂಡವೊಂದು, ಕಾಡಿನಲ್ಲಿ ಮೋಜು-ಮಸ್ತಿ ಮಾಡುತ್ತಾ ರೀಲ್ಸ್ ಚಿತ್ರೀಕರಣ ನಡೆಸಿದೆ. ವನ್ಯಜೀವಿ ಸಂರಕ್ಷಣಾ ನಿಯಮಗಳನ್ನು ಸಂಪೂರ್ಣವಾಗಿ ಉಲ್ಲಂಘಿಸಿರುವ ಈ ಯುವಕರ ಗುಂಪು, ಕಾಡಿನಲ್ಲಿದ್ದ ಆನೆಗಳ ತೀರಾ ಸಮೀಪಕ್ಕೆ ತೆರಳಿ ಕೂಗಾಟ ಮತ್ತು ಕಿರುಚಾಟ ನಡೆಸಿ ಅವುಗಳನ್ನು ಬೆದರಿಸಿದೆ. ಈ ಬೇಜವಾಬ್ದಾರಿತನದ ಹುಚ್ಚಾಟದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರವಾಗಿ ವೈರಲ್ ಆಗಿದೆ.

ಅರಣ್ಯ ಇಲಾಖೆಯ ತೀವ್ರ ನಿರ್ಲಕ್ಷ್ಯದಿಂದಾಗಿ ಯುವಕರ ಜೀವಕ್ಕೂ ಅಪಾಯ ತಂದೊಡ್ಡುವ ಹಾಗೂ ವನ್ಯಜೀವಿಗಳಿಗೆ ತೊಂದರೆ ಕೊಡುವ ಇಂತಹ ಘಟನೆ ನಡೆದಿದ್ದು, ಭದ್ರಾ ಟೈಗರ್ ರಿಸರ್ವ್‌ನ ಭದ್ರತೆಯ ಬಗ್ಗೆ ಸಾರ್ವಜನಿಕ ವಲಯದಲ್ಲಿ ದೊಡ್ಡ ಪ್ರಶ್ನೆಗಳು ಎದ್ದಿವೆ. ಅತಿ ಸೂಕ್ಷ್ಮ ಪ್ರದೇಶವಾದ ಹೆಬ್ಬೆ ವಲಯದಲ್ಲಿ ಅಕ್ರಮ ಪ್ರವೇಶಕ್ಕೆ ಅವಕಾಶ ಸಿಕ್ಕಿದ್ದು ಹೇಗೆ ಎಂದು ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಸದ್ಯ ವನ್ಯಜೀವಿಗಳಿಗೆ ಕಿರುಕುಳ ನೀಡಿ ನಿಯಮ ಉಲ್ಲಂಘಿಸಿರುವ ಯುವಕರ ನಡೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಪರಿಸರವಾದಿಗಳು, ತಕ್ಷಣವೇ ಅಕ್ರಮ ಸಫಾರಿಗೆ ಬಳಸಿದ ಜೀಪನ್ನು ವಶಕ್ಕೆ ಪಡೆದು, ಸಂಬಂಧಪಟ್ಟ ಯುವಕರ ವಿರುದ್ಧ ಕಠಿಣ ಪ್ರಕರಣ ದಾಖಲಿಸಿ ಕಾನೂನು ಕ್ರಮ ಜರುಗಿಸಬೇಕು ಎಂದು ಅರಣ್ಯ ಇಲಾಖೆಯನ್ನು ಒತ್ತಾಯಿಸಿದ್ದಾರೆ.

Leave a Reply

Your email address will not be published. Required fields are marked *