ಚಿಕ್ಕಮಗಳೂರಿನಲ್ಲಿ ಇತ್ತೀಚೆಗೆ ನಡೆಯುತ್ತಿರುವ ಸರಣಿ ಅಹಿತಕರ ಘಟನೆಗಳು ನಗರದ ಶಾಂತಿ ಮತ್ತು ಸೌಹಾರ್ದತೆಯನ್ನು ಕೆಡಿಸುವ ಸಂಚಿನಂತೆ ಕಾಣುತ್ತಿವೆ ಎಂದು ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಆತಂಕ ವ್ಯಕ್ತಪಡಿಸಿವೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿ.ಹೆಚ್ ಪಿ ಜಿಲ್ಲಾ ಕಾರ್ಯದರ್ಶಿ ರಂಗನಾಥ್ ದಲಿತ ಯುವಕನ ಮೇಲೆ ಹಲ್ಲೆ, ಮನೆಗಳ ಮೇಲೆ ಕಲ್ಲು ತೂರಾಟ, ಗೋ ಹತ್ಯೆ, ದೇವಸ್ಥಾನದ ವಿಗ್ರಹಗಳ ಧ್ವಂಸ ಹಾಗೂ ವೈದ್ಯರ ಮೇಲೆ ಹಲ್ಲೆಯಂತಹ ಸುಮಾರು 12ಕ್ಕೂ ಹೆಚ್ಚು ಗಂಭೀರ ಪ್ರಕರಣಗಳನ್ನು ಉಲ್ಲೇಖಿಸಿರುವ ಸಂಘಟನೆಯು, ಇವೆಲ್ಲವೂ ಒಂದು ವ್ಯವಸ್ಥಿತ ಗುಂಪಿನಿಂದ ನಡೆಯುತ್ತಿವೆ ಎಂದು ಆರೋಪಿಸಿದ್ರು.
ವಿಜಯಪುರದ ದಲಿತರ ಮನೆಯ ಮೇಲೆ ಕಲ್ಲು ತೂರಾಟ ನಡೆದಾಗ ಆರೋಪಿಗಳನ್ನು ಹಿಡಿದು ಪೊಲೀಸರಿಗೆ ಒಪ್ಪಿಸಲು ಸಹಕರಿಸಿದ ಸಂತೋಷ್ ಮತ್ತು ಶ್ಯಾಮ್ ಎಂಬ ಯುವಕರ ಮೇಲೆ ಪೊಲೀಸರು ವಿನಾಕಾರಣ ಪ್ರಕರಣ ದಾಖಲಿಸಿರುವುದು ಖಂಡನೀಯ ಎಂದು ಸಂಘಟನೆ ಹೇಳಿದೆ. ಅಷ್ಟೇ ಅಲ್ಲದೆ, ಘಟನೆ ನಡೆದ ಕೇವಲ 15 ನಿಮಿಷಗಳಲ್ಲಿ ಒಂದು ನಿರ್ದಿಷ್ಟ ಸಮುದಾಯದ ನೂರಾರು ಜನರು ಸ್ಥಳಕ್ಕೆ ಜಮಾಯಿಸಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ದೂರು ನೀಡಲು ಹೋದ ದಲಿತ ಕುಟುಂಬಕ್ಕೆ ರಕ್ಷಣೆ ನೀಡುವ ಬದಲು ಪೊಲೀಸರು ಒತ್ತಡಕ್ಕೆ ಮಣಿಯುತ್ತಿದ್ದಾರೆ ಎಂಬ ಭಾವನೆ ಮೂಡುತ್ತಿದೆ ಎಂದು ವಿಶ್ವ ಹಿಂದೂ ಪರಿಷತ್ ದೂರಿದೆ. ಇದಲ್ಲದೆ, ಆರೋಪಿಗಳನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸುವ ಸಂದರ್ಭದಲ್ಲಿ ಆಸ್ಪತ್ರೆಯ ಸಿಬ್ಬಂದಿ ಹಾಗೂ ಆಂಬ್ಯುಲೆನ್ಸ್ ಚಾಲಕರ ಮೇಲೆ ನಡೆದ ಹಲ್ಲೆ ಪ್ರಕರಣಗಳಲ್ಲಿ ಈವರೆಗೆ ಯಾವುದೇ ಸೂಕ್ತ ಕ್ರಮ ಕೈಗೊಳ್ಳದಿರುವುದು ಸರ್ಕಾರದ ವಿಫಲತೆಯನ್ನು ತೋರಿಸುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.













Leave a Reply