ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಾಡಾನೆಗಳ ಅಬ್ಬರ ಮುಂದುವರಿದಿದ್ದು, ಇತ್ತೀಚೆಗೆ ತಾಲೂಕಿನ ಗುಡ್ಡೆಕೊಪ್ಪ ಗ್ರಾಮದ ಬಳಿ ನಡೆದ ಘಟನೆ ಸ್ಥಳೀಯರನ್ನು ಮತ್ತಷ್ಟು ಆತಂಕಕ್ಕೆ ತಳ್ಳಿದೆ. ರಸ್ತೆಯಲ್ಲಿ ಸಾಗುತ್ತಿದ್ದ ಬೈಕ್ ಸವಾರನ ಮೇಲೆ ಕಾಡಾನೆಯೊಂದು ಇದ್ದಕ್ಕಿದ್ದಂತೆ ದಾಳಿ ಮಾಡಲು ಮುಂದಾಗಿದ್ದು, ಈ ವೇಳೆ ಯುವಕ ಗಾಬರಿಯಾಗದೆ ತಕ್ಷಣ ಬೈಕ್ ಬಿಟ್ಟು ದೂರ ಓಡಿಹೋಗಿದ್ದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಆದರೆ ಸವಾರನ ಕೈಗೆ ಸಿಗದ ಗಜರಾಜ ರಸ್ತೆಯಲ್ಲಿದ್ದ ಬೈಕನ್ನು ತನ್ನ ಕಾಲಿನಿಂದ ತುಳಿದು ಸಂಪೂರ್ಣವಾಗಿ ಜಖಂ ಮಾಡಿದೆ.
ಈ ಪ್ರದೇಶದಲ್ಲಿ ಕಳೆದ ಒಂದು ವರ್ಷದ ಅವಧಿಯಲ್ಲಿ ಸುಮಾರು ಒಂಬತ್ತು ಜನರು ಆನೆ ದಾಳಿಗೆ ಬಲಿಯಾಗಿರುವುದು ಪರಿಸ್ಥಿತಿಯ ಗಂಭೀರತೆಯನ್ನು ಎತ್ತಿ ತೋರಿಸುತ್ತಿದೆ. ಈ ಹಿಂದೆ ಆನೆಗಳ ಹಾವಳಿಯನ್ನು ಶಾಶ್ವತವಾಗಿ ತಡೆಗಟ್ಟುವಂತೆ ಆಗ್ರಹಿಸಿ ಹೋರಾಟ ನಡೆಸಿದ ಸಂದರ್ಭದಲ್ಲಿ ಅರಣ್ಯ ಇಲಾಖೆ ಅಥವಾ ಪೊಲೀಸರಿಂದ ಸೂಕ್ತ ಬೆಂಬಲ ಸಿಗದೆ, ಉಲ್ಟಾ ಹೋರಾಟಗಾರರ ಮೇಲೆಯೇ ಕಾನೂನು ಕ್ರಮ ಜರುಗಿಸಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ. ಇನ್ನಾದರೂ ಅಧಿಕಾರಿಗಳು ಎಚ್ಚೆತ್ತುಕೊಂಡು ಈ ಭಾಗದ ಜನವಸತಿ ಪ್ರದೇಶಗಳಿಗೆ ನುಗ್ಗುವ ಆನೆಗಳನ್ನು ಕೂಡಲೇ ಸೆರೆಹಿಡಿದು ಬೇರೆಡೆಗೆ ಸ್ಥಳಾಂತರಿಸಬೇಕೆಂದು ಗ್ರಾಮಸ್ಥರು ತೀವ್ರವಾಗಿ ಒತ್ತಾಯಿಸಿದ್ದಾರೆ.
















Leave a Reply