ಚಿಕ್ಕಮಗಳೂರು: ಕಾಫಿನಾಡಿನಲ್ಲಿ ವರುಣನ ಅಬ್ಬರ ಮುಂದುವರಿದಿದ್ದು, ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿ ಮತ್ತೆ ಭೂಕುಸಿತದ ಭೀತಿ ಎದುರಾಗಿದೆ. ಕಳೆದ ಕೆಲವು ದಿನಗಳಿಂದ ಮುಳ್ಳಯ್ಯನಗಿರಿ ಹಾಗೂ ಪಶ್ಚಿಮ ಘಟ್ಟದ ಸುತ್ತಮುತ್ತ ಸತತವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಮಣ್ಣು ಸಂಪೂರ್ಣ ಸಡಿಲಗೊಂಡಿದೆ. ಪರಿಣಾಮ, ಪ್ರಸಿದ್ಧ ದತ್ತಪೀಠಕ್ಕೆ ತೆರಳುವ ಮಾರ್ಗದ ಕವಿಕಲ್ ಗಂಡಿ ಸಮೀಪ ಬೃಹತ್ ಪ್ರಮಾಣದಲ್ಲಿ ಮಣ್ಣು ರಸ್ತೆಗೆ ಕುಸಿದು ಬಿದ್ದಿದೆ.
ಅಚ್ಚರಿಯ ಎಂದರೆ, ಮುಂದಾಗಬಹುದಾದ ಅಪಾಯ ತಪ್ಪಿಸಲು ಕಾಂಕ್ರೀಟ್ ತಡೆಗೋಡೆ ನಿರ್ಮಿಸುತ್ತಿದ್ದ ಸ್ಥಳದಲ್ಲೇ ಈ ದುರಂತ ಸಂಭವಿಸಿದೆ. ಈ ರಸ್ತೆಯು ಅತ್ತಿಗುಂಡಿ ಹಾಗೂ ಮಹಲ್ ಸೇರಿದಂತೆ ಹಲವು ಸುತ್ತಮುತ್ತಲಿನ ಗ್ರಾಮೀಣ ಪ್ರದೇಶಗಳಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ದಾರಿಯಾಗಿರುವುದರಿಂದ ಕ್ಷಣಾರ್ಧದಲ್ಲಿ ವಾಹನ ಸಂಚಾರ ಸಂಪೂರ್ಣ ಬಂದ್ ಆಗಿತ್ತು. ವಿಷಯ ತಿಳಿಯುತ್ತಿದ್ದಂತೆ ತಕ್ಷಣವೇ ಸ್ಥಳಕ್ಕೆ ಧಾವಿಸಿದ ಜಿಲ್ಲಾಡಳಿತದ ಸಿಬ್ಬಂದಿ, ಜೆಸಿಬಿ ಯಂತ್ರಗಳ ಸಹಾಯದಿಂದ ರಸ್ತೆಗೆ ಬಿದ್ದಿದ್ದ ಮಣ್ಣಿನ ರಾಶಿಯನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಹಾದಿ ಮಾಡಿಕೊಟ್ಟಿದ್ದಾರೆ.
ಆದರೆ, ಮಲೆನಾಡು ಭಾಗದಲ್ಲಿ ಮಳೆಯ ಪ್ರಮಾಣ ತಗ್ಗದಿರುವುದರಿಂದ ಮತ್ತೆ ಗುಡ್ಡ ಕುಸಿಯುವ ಭೀತಿ ನಿರಂತರವಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದು, ಕವಿಕಲ್ ಗಂಡಿ ಹಾಗೂ ಮುಳ್ಳಯ್ಯನಗಿರಿ ಮಾರ್ಗವಾಗಿ ಪ್ರಯಾಣಿಸುವ ಪ್ರವಾಸಿಗರು ಮತ್ತು ಸ್ಥಳೀಯರು ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.


