ಚಿಕ್ಕಮಗಳೂರು: ಪೊಲೀಸರ ದಾಳಿಗೆ ಹೆದರಿ ಓಡುವಾಗ ಜಾರಿ ಬಿದ್ದು ತಲೆಗೆ ಗಂಭೀರ ಗಾಯಗೊಂಡ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಎನ್.ಆರ್.ಪುರ ತಾಲೂಕಿನ ಕಡಬಗೆರೆ ಸಮೀಪದ ಕಾಫಿತೋಟದಲ್ಲಿ ನಡೆದಿದೆ.
ಗುಡ್ಡೆಕೊಪ್ಪ ಗ್ರಾಮದ ರಮೇಶ್ (35) ಮೃತ ದುರ್ದೈವಿ. ಬಾಸಾಪುರ ಅರಣ್ಯ ಪ್ರದೇಶದಲ್ಲಿ ಅಂದರ್-ಬಾಹರ್ ಜೂಜಾಟ ನಡೆಯುತ್ತಿರುವ ಬಗ್ಗೆ ಮಾಹಿತಿ ಪಡೆದ ಬಾಳೆಹೊನ್ನೂರು ಪೊಲೀಸರು ದಾಳಿ ನಡೆಸಿದ್ದಾರೆ ಎನ್ನಲಾಗಿದೆ.
ಪೊಲೀಸರು ದಾಳಿ ನಡೆಸುತ್ತಿದ್ದಂತೆ ಸ್ಥಳದಲ್ಲಿದ್ದವರು ಭಯಗೊಂಡು ಓಡಿದ್ದಾರೆ. ಈ ವೇಳೆ ರಮೇಶ್ ಕೂಡ ಓಡುವಾಗ ಜಾರಿ ಬಿದ್ದು, ತಲೆಯು ಬಂಡೆಗೆ ಬಡಿದಿದೆ ಎನ್ನಲಾಗಿದೆ. ತೀವ್ರ ರಕ್ತಸ್ರಾವದಿಂದ ರಮೇಶ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಘಟನಾ ಸ್ಥಳದಲ್ಲಿದ್ದ ಒಂಬತ್ತು ಜನರ ಪೈಕಿ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜೂಜಾಟದ ಗುಂಪು ಕಾಡಿನಲ್ಲಿ ನಿರಂತರವಾಗಿ ಅಂದರ್-ಬಾಹರ್ ಆಡುತ್ತಿತ್ತು ಎನ್ನಲಾಗಿದೆ.
ಇನ್ನು ಕಳೆದ ರಾತ್ರಿ ಮನೆಗೆ ಬಾರದ ಹಿನ್ನೆಲೆಯಲ್ಲಿ ರಮೇಶ್ಗಾಗಿ ಕುಟುಂಬಸ್ಥರು ಆತಂಕದಿಂದ ಹುಡುಕಾಟ ನಡೆಸಿದ್ದಾರೆ. ಇಂದು ಹುಡುಕಾಟ ನಡೆಸಿದಾಗ ತಲೆಯಲ್ಲಿ ರಕ್ತಸ್ರಾವವಾಗಿದ್ದ ಸ್ಥಿತಿಯಲ್ಲಿ ರಮೇಶ್ ಮೃತದೇಹ ಪತ್ತೆಯಾಗಿದೆ.
ಘಟನೆ ಸಂಬಂಧ ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.


