ಚಿಕ್ಕಮಗಳೂರು: ಕಾಫಿನಾಡ ಮಲೆನಾಡು ಭಾಗದಲ್ಲಿ ಬಿರುಗಾಳಿ ಸಹಿತ ಮಳೆಯ ಅಬ್ಬರ ಜೋರಾಗಿದ್ದು, ಭಾರಿ ಗಾಳಿಗೆ ಬೃಹತ್ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದಿರುವ ಘಟನೆ ಮೂಡಿಗೆರೆ ತಾಲೂಕಿನ ಬಕ್ಕಿ ಗ್ರಾಮದ ಬಳಿ ಸಂಭವಿಸಿದೆ.
ಮೂಡಿಗೆರೆಯಿಂದ ಗೌಡಹಳ್ಳಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯಲ್ಲೇ ಈ ದುರ್ಘಟನೆ ನಡೆದಿದ್ದು, ಮರ ಬಿದ್ದ ಪರಿಣಾಮ ಈ ಮಾರ್ಗದ ಹಲವು ಗ್ರಾಮಗಳ ಸಂಪರ್ಕ ಸಂಪೂರ್ಣವಾಗಿ ಕಡಿತಗೊಂಡಿದೆ. ಮಲೆನಾಡಿನಾದ್ಯಂತ ಸದ್ಯ ಸಾಧಾರಣ ಮಳೆಯಾಗುತ್ತಿದ್ದರೂ, ವಿಪರೀತ ಗಾಳಿ ಬೀಸುತ್ತಿರುವುದರಿಂದ ಈ ಅವಾಂತರ ಸೃಷ್ಟಿಯಾಗಿದೆ.
ಕೂಲಿ ಕಾರ್ಮಿಕರು, ಸ್ಥಳೀಯರ ಪರದಾಟ
ಮುಖ್ಯ ರಸ್ತೆಯಲ್ಲೇ ಮರ ಬಿದ್ದಿರುವುದರಿಂದ ಪ್ರತಿನಿತ್ಯ ತೋಟಗಳಿಗೆ ಹಾಗೂ ಇತರೆ ಕೂಲಿ ಕೆಲಸಗಳಿಗೆ ತೆರಳುವ ಕಾರ್ಮಿಕರು ತೀವ್ರ ತೊಂದರೆ ಅನುಭವಿಸುವಂತಾಗಿದೆ. ಮರ ತೆರವುಗೊಳಿಸುವ ಕಾರ್ಯಾಚರಣೆ ತಡವಾಗುತ್ತಿರುವುದರಿಂದ ಸ್ಥಳೀಯರು ಹಾಗೂ ಪ್ರಯಾಣಿಕರು ರಸ್ತೆಯಲ್ಲೇ ಕಾದು ನಿಲ್ಲುವ ಪರಿಸ್ಥಿತಿ ನಿರ್ಮಾಣವಾಗಿದೆ.
ಪರ್ಯಾಯ ಮಾರ್ಗ ಬಳಸಲು ಮನವಿ
ಮರ ತೆರವುಗೊಳಿಸುವ ಕಾರ್ಯ ಪೂರ್ಣಗೊಳ್ಳುವವರೆಗೆ ಸಾರ್ವಜನಿಕರು ಹಾಗೂ ವಾಹನ ಸವಾರರು ಈ ಮಾರ್ಗದ ಬದಲಾಗಿ ಬೆಟ್ಟಗೆರೆ – ಹ್ಯಾರಗುಡ್ಡೆ ಮಾರ್ಗವಾಗಿ ಸಂಚರಿಸುವಂತೆ ಸ್ಥಳೀಯ ಆಡಳಿತ ಹಾಗೂ ಗ್ರಾಮಸ್ಥರು ಮನವಿ ಮಾಡಿದ್ದಾರೆ. ಜಿಲ್ಲೆಯ ಮಲೆನಾಡು ಭಾಗದಾದ್ಯಂತ ಗಾಳಿ-ಮಳೆಯಿಂದಾಗಿ ಅಲ್ಲಲ್ಲಿ ಇಂತಹ ನಾನಾ ಅವಾಂತರಗಳು ವರದಿಯಾಗುತ್ತಿವೆ.














Leave a Reply