ಚಿಕ್ಕಮಗಳೂರಿನ ಜಿಲ್ಲಾ ನ್ಯಾಯಾಲಯಕ್ಕೆ ಬಂದಿರುವ ಬಾಂಬ್ ಬೆದರಿಕೆ ಇ-ಮೇಲ್ ಆತಂಕಕ್ಕೆ ಕಾರಣವಾಗಿದೆ. ಮಧ್ಯಾಹ್ನ 1.30 ರಿಂದ 3.30 ರ ಅವಧಿಯಲ್ಲಿ ಕೋರ್ಟ್ ಆವರಣವನ್ನು ಸ್ಫೋಟಿಸುವುದಾಗಿ ದುಷ್ಕರ್ಮಿಗಳು ಕಳುಹಿಸಿರುವ ಸಂದೇಶದಿಂದಾಗಿ ನ್ಯಾಯಾಲಯದ ಆವರಣದಲ್ಲಿ ದಿಢೀರ್ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.
ವಿಷಯ ತಿಳಿಯುತ್ತಿದ್ದಂತೆ ತಕ್ಷಣವೇ ಅಲರ್ಟ್ ಆಗಿರುವ ಪೊಲೀಸರು, ಬಾಂಬ್ ಪತ್ತೆ ದಳ ಹಾಗೂ ಶ್ವಾನ ದಳದ ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ಧಾವಿಸಿ ಇಂಚಿಂಚೂ ಜಾಗವನ್ನು ತೀವ್ರ ತಪಾಸಣೆಗೆ ಒಳಪಡಿಸಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಜಿತೇಂದ್ರ ದಾಯ್ಮಾ ಅವರು ಖುದ್ದಾಗಿ ನ್ಯಾಯಾಲಯಕ್ಕೆ ಭೇಟಿ ನೀಡಿ, ಪರಿಸ್ಥಿತಿಯನ್ನು ಪರಿಶೀಲಿಸಿದ್ದಾರೆ. ಅಲ್ಲದೆ ಸಿಬ್ಬಂದಿಯಿಂದ ಮಾಹಿತಿ ಪಡೆದು ಯಾವುದೇ ಅಹಿತಕರ ಘಟನೆ ನಡೆಯದಂತೆ ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಈ ಎಲ್ಲ ಆತಂಕ ಮತ್ತು ಕಟ್ಟುನಿಟ್ಟಿನ ತಪಾಸಣೆಯ ನಡುವೆಯೂ ನ್ಯಾಯಾಲಯದ ಕಲಾಪಗಳನ್ನು ಸ್ಥಗಿತಗೊಳಿಸದಂತೆ ನ್ಯಾಯಾಧೀಶರು ಸೂಚನೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಕೋರ್ಟ್ ಕಲಾಪಗಳು ಎಂದಿನಂತೆ ಮುಂದುವರಿದಿದ್ದು, ಅದರ ನಡುವೆಯೇ ಪೊಲೀಸರು ಬಿಗಿ ಭದ್ರತೆಯೊಂದಿಗೆ ಆವರಣದ ಒಳಭಾಗದಲ್ಲಿ ಶೋಧ ಕಾರ್ಯವನ್ನು ಚುರುಕುಗೊಳಿಸಿದ್ದಾರೆ. ಇ-ಮೇಲ್ ಮೂಲದ ಪತ್ತೆಗಾಗಿ ಸೈಬರ್ ಕ್ರೈಂ ಪೊಲೀಸರು ಕೂಡ ಕಾರ್ಯಾಚರಣೆಗೆ ಇಳಿದಿದ್ದಾರೆ.
ಕೋರ್ಟ್ ಸ್ಫೋಟಿಸುವುದಾಗಿ ದುಷ್ಕರ್ಮಿಗಳ ಸಂದೇಶ ಶ್ವಾನದಳದಿಂದ ತೀವ್ರ ಶೋಧ















Leave a Reply