ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಹಾರ್ಮಕ್ಕಿ ಸಮೀಪದ ಖಾಸಗಿ ಕಾಫಿ ಎಸ್ಟೇಟ್ ಒಂದರಲ್ಲಿ ಭೀಕರ ಕೊಲೆ ನಡೆದಿದೆ. ಲೇಬರ್ ಲೈನ್ನಲ್ಲಿ ವಾಸಿಸುತ್ತಿದ್ದ ಕಾರ್ಮಿಕರ ನಡುವೆ ದಿಢೀರನೆ ಆರಂಭವಾದ ಮಾತಿನ ಚಕಮಕಿ ವಿಕೋಪಕ್ಕೆ ತಿರುಗಿ, ಹಾವೇರಿ ಮೂಲದ ಭೀಮ (42) ಎಂಬುವವರು ಸ್ಥಳದಲ್ಲೇ ದಾರುಣವಾಗಿ ಹತ್ಯೆಯಾಗಿದ್ದಾರೆ. ರೊಚ್ಚಿಗೆದ್ದ ಆರೋಪಿ ಮತ್ತೊಬ್ಬ ಕಾರ್ಮಿಕನ ಮೇಲೆಯೂ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಗಂಭೀರವಾಗಿ ಗಾಯಗೊಳಿಸಿದ್ದು, ಗಾಯಾಳುವನ್ನು ಕಳಸ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಕೃತ್ಯ ಎಸಗಿ ಸ್ಥಳದಿಂದ ಪರಾರಿಯಾಗಲು ಯತ್ನಿಸುತ್ತಿದ್ದ ಆರೋಪಿ ಫಕೀರಪ್ಪನನ್ನು ಕಳಸ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಘಟನಾ ಸ್ಥಳಕ್ಕೆ ಚಿಕ್ಕಮಗಳೂರು ಎಸ್ಪಿ ಜಿತೇಂದ್ರ ಕುಮಾರ್ ದಾಯ್ಮಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕಳಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಆರೋಪಿಯ ತೀವ್ರ ವಿಚಾರಣೆ ನಡೆಸಲಾಗುತ್ತಿದೆ. ಶಾಂತವಾಗಿದ್ದ ಎಸ್ಟೇಟ್ನಲ್ಲಿ ಈ ರಕ್ತಸಿಕ್ತ ಜಗಳ ನಡೆಯಲು ನಿಜವಾದ ಕಾರಣವೇನು ಎಂಬುದು ಪೊಲೀಸರ ತನಿಖೆಯಿಂದಷ್ಟೇ ಹೊರಬರಬೇಕಾಗಿದೆ.


