ಕಾಫಿನಾಡಿನ ಮಲೆನಾಡು ಭಾಗದಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ವರುಣನ ಅಬ್ಬರಕ್ಕೆ ಹಲವೆಡೆ ಭಾರೀ ಅನಾಹುತಗಳು ಸಂಭವಿಸಿವೆ. ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ನದಿ, ತೊರೆಗಳು ಉಕ್ಕಿ ಹರಿಯುತ್ತಿದ್ದು, ರೈತರ ತೋಟಗಳಿಗೆ ನೀರು ನುಗ್ಗಿ ಅಪಾರ ಪ್ರಮಾಣದ ಹಾನಿಯಾಗಿದೆ.
ಬಾಳೆಹೊನ್ನೂರಿನ ಹೊಳೆಬಾಗಿಲು ಗ್ರಾಮದಲ್ಲಿ ಭದ್ರಾ ನದಿಯು ಮಿತಿಮೀರಿ ಹರಿಯುತ್ತಿದ್ದು, ನದಿ ತೀರದ ಸುತ್ತಮುತ್ತಲಿನ ಅಡಿಕೆ ತೋಟಗಳು ಸಂಪೂರ್ಣವಾಗಿ ಜಲಾವೃತಗೊಂಡಿವೆ. ಸುಮಾರು 10 ಎಕರೆಗೂ ಅಧಿಕ ವಿಸ್ತೀರ್ಣದ ಅಡಿಕೆ ತೋಟಗಳು ನೀರಿನಲ್ಲಿ ಮುಳುಗಡೆಯಾಗಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ಬೆಳೆ ನಾಶವಾಗಿದೆ. ಕೈಗೆ ಬಂದ ಬೆಳೆ ಕಣ್ಣೆದುರೇ ನೀರಿನಲ್ಲಿ ಕೊಚ್ಚಿ ಹೋಗುತ್ತಿರುವುದನ್ನು ಕಂಡು ಸ್ಥಳೀಯ ರೈತರು ತೀವ್ರ ಆತಂಕ ಹಾಗೂ ಅಳಲನ್ನು ತೋಡಿಕೊಂಡಿದ್ದಾರೆ.


