ಕೆಪಿಸಿಸಿ ಸಂಶೋಧನಾ ವಿಭಾಗದ ಜಿಲ್ಲಾ ಅಧ್ಯಕ್ಷರಾದ ಶಿವಕುಮಾರ್ ಹೆಚ್.ಎಸ್. ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿರುವ ಬಜೆಟ್ ಅನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದು, ಇದು ರೈತರು, ಕಾರ್ಮಿಕರು, ಮಹಿಳೆಯರು ಹಾಗೂ ಬಡವರ ಹಿತ ಕಾಯುವ ನಿಜವಾದ ಜನಪರ ಬಜೆಟ್ ಎಂದು ಬಣ್ಣಿಸಿದ್ದಾರೆ. ದಲಿತ ಸಮುದಾಯದ ಏಳಿಗೆಗಾಗಿ ಎಸ್ಸಿಎಸ್ಪಿ-ಟಿಎಸ್ಪಿ ಯೋಜನೆಯಡಿ 44,632 ಕೋಟಿ ರೂಪಾಯಿಗಳನ್ನು ಮೀಸಲಿರಿಸುವ ಮೂಲಕ ಸರ್ಕಾರವು ಶೋಷಿತ ವರ್ಗದವರ ಅಭಿವೃದ್ಧಿಗೆ ದೊಡ್ಡ ಮಟ್ಟದ ಪಣತೊಟ್ಟಿದೆ ಎಂದು ಅವರು ತಿಳಿಸಿದ್ದಾರೆ. ಕಾರ್ಮಿಕರ ಮಕ್ಕಳ ಶೈಕ್ಷಣಿಕ ಪ್ರಗತಿಗಾಗಿ 62 ಹೊಸ ವಸತಿ ಕಾರ್ಮಿಕ ಶಾಲೆಗಳನ್ನು ತೆರೆಯಲು ನಿರ್ಧರಿಸಿರುವುದು ಶಿಕ್ಷಣ ವಂಚಿತರ ಬದುಕಿನಲ್ಲಿ ಶೈಕ್ಷಣಿಕ ಕ್ರಾಂತಿಗೆ ದಾರಿದೀಪವಾಗಲಿದೆ ಎಂಬ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದ್ದಾರೆ.
ರೈತರ ಅಭ್ಯುದಯದ ದೃಷ್ಟಿಯಿಂದ 30,000 ಕೋಟಿ ರೂಪಾಯಿಗಳನ್ನು ಶೂನ್ಯ ಬಡ್ಡಿದರದಲ್ಲಿ ಬೆಳೆಸಾಲವಾಗಿ ಘೋಷಿಸಿರುವುದು ರಾಜ್ಯದ ಸುಮಾರು 38 ಲಕ್ಷ ರೈತರಿಗೆ ವರದಾನವಾಗಲಿದೆ. ಅದರಲ್ಲೂ ವಿಶೇಷವಾಗಿ ಡಾ. ಬಿ.ಆರ್. ಅಂಬೇಡ್ಕರ್ ಅವರು ಭೇಟಿ ನೀಡಿದ್ದ ಐತಿಹಾಸಿಕ ಸ್ಥಳಗಳಲ್ಲಿ ಸಾಮಾನ್ಯ ಜನರ ಮಕ್ಕಳಿಗಾಗಿ ಸಿಬಿಎಸ್ಇ ಶಾಲೆಗಳನ್ನು ಪ್ರಾರಂಭಿಸಲು ಮುಂದಾಗಿರುವುದು ಕಾಂಗ್ರೆಸ್ ಸರ್ಕಾರವು ಸಂವಿಧಾನ ಶಿಲ್ಪಿಗೆ ಸಲ್ಲಿಸುತ್ತಿರುವ ಅತ್ಯುನ್ನತ ಗೌರವವಾಗಿದೆ ಎಂದು ಶಿವಕುಮಾರ್ ಹೇಳಿದ್ದಾರೆ. ಮಲೆನಾಡು ಭಾಗದ ರೈತರು ಎದುರಿಸುತ್ತಿರುವ ಅಡಿಕೆ ಬೆಳೆಯ ಎಲೆ ಚುಕ್ಕಿ ರೋಗ, ಹಳದಿ ಎಲೆ ರೋಗ ಹಾಗೂ ತೆಂಗು ಬೆಳೆಯ ಕೀಟಬಾಧೆಗಳ ನಿಯಂತ್ರಣಕ್ಕೆ 10 ಕೋಟಿ ರೂಪಾಯಿ ವೆಚ್ಚದಲ್ಲಿ ಸಮುದಾಯ ಆಧಾರಿತ ಕ್ರಮಗಳನ್ನು ಕೈಗೊಳ್ಳುತ್ತಿರುವುದು ಸರ್ಕಾರದ ರೈತಪರ ಕಾಳಜಿಗೆ ಸಾಕ್ಷಿಯಾಗಿದೆ ಎಂದು ಅವರು ಈ ಸಂದರ್ಭದಲ್ಲಿ ಅಭಿಪ್ರಾಯಪಟ್ಟಿದ್ದಾರೆ.











Leave a Reply