ಚಿಕ್ಕಮಗಳೂರು: ರಾಜ್ಯ ರಾಜಕೀಯದಲ್ಲಿ ತೀವ್ರ ಸಂಚಲನ ಸೃಷ್ಟಿಸಿರುವ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಪ್ರಕರಣದ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೆಪ್ಟೆಂಬರ್ 10ಕ್ಕೆ ಮುಂದೂಡಿದೆ.
2023ರ ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಟಿ.ಡಿ. ರಾಜೇಗೌಡ ಅವರು ಬಿಜೆಪಿಯ ಡಿ.ಎನ್. ಜೀವರಾಜ್ ವಿರುದ್ಧ ಗೆಲುವು ಸಾಧಿಸಿದ್ದರು. ಈ ಫಲಿತಾಂಶವನ್ನು ಪ್ರಶ್ನಿಸಿ ಜೀವರಾಜ್ ಹೈಕೋರ್ಟ್ ಮೆಟ್ಟಿಲೇರಿದಾಗ, ನ್ಯಾಯಾಲಯದ ನಿರ್ದೇಶನದಂತೆ ಅಂಚೆ ಮತಗಳ ಮರು ಎಣಿಕೆ ನಡೆದು ಫಲಿತಾಂಶ ಬದಲಾಗಿತ್ತು. ಇದರ ಆಧಾರದ ಮೇಲೆ ಜೀವರಾಜ್ ಅವರು ಶಾಸಕರಾಗಿ ಪ್ರಮಾಣ ವಚನವನ್ನೂ ಸ್ವೀಕರಿಸಿದ್ದರು.
ಆದರೆ ಮರು ಎಣಿಕೆಯಲ್ಲಿ ಗಂಭೀರ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ ಟಿ.ಡಿ. ರಾಜೇಗೌಡ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್ ಹೈಕೋರ್ಟ್ ಆದೇಶಕ್ಕೆ ಮಧ್ಯಂತರ ತಡೆ ನೀಡಿ, ರಾಜೇಗೌಡ ಅವರ ಶಾಸಕ ಸ್ಥಾನವನ್ನು ತಾತ್ಕಾಲಿಕವಾಗಿ ಮುಂದುವರಿಸಲು ಅನುಮತಿ ನೀಡಿತ್ತು.
ಪ್ರಕರಣಕ್ಕೆ ಸಂಬಂಧಿಸಿದಂತೆ ಚುನಾವಣಾ ಆಯೋಗವು ಮತ ಎಣಿಕೆಯ ಮೂಲ ದಾಖಲೆಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದು, ದಾಖಲೆಗಳ ಕೂಲಂಕಷ ಪರಿಶೀಲನೆ ಹಾಗೂ ವಾದ-ಪ್ರತಿವಾದಗಳು ಬಾಕಿ ಇವೆ. ಈ ಹಿನ್ನೆಲೆಯಲ್ಲಿ ಅಂತಿಮ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೆಪ್ಟೆಂಬರ್ 10ಕ್ಕೆ ನಿಗದಿಪಡಿಸಿದ್ದು, ಕ್ಷೇತ್ರದ ಭವಿಷ್ಯ ಹಾಗೂ ನ್ಯಾಯಾಲಯದ ಅಂತಿಮ ತೀರ್ಪಿನ ಮೇಲೆ ಎಲ್ಲರ ಚಿತ್ತ ನೆಟ್ಟಿದೆ.


