ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕಾಡುಪ್ರಾಣಿಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಇಂದು ತೋಟದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರು ಕಾಡುಕೋಣದ ಭೀಕರ ದಾಳಿಗೆ ಸಿಲುಕಿ ಪ್ರಾಣ ಕಳೆದುಕೊಂಡಿರುವ ಘಟನೆ ಕಳಸ ತಾಲೂಕಿನಲ್ಲಿ ನಡೆದಿದೆ.
ಕಳಸ ತಾಲೂಕಿನ ಬಿಳಗುಳಿ ಗ್ರಾಮದ ನಿವಾಸಿ ಶೀಲಾ (52) ಕಾಡುಕೋಣ ದಾಳಿಯಿಂದ ಮೃತಪಟ್ಟ ದುರ್ದೈವಿಯಾಗಿದ್ದಾರೆ.
ಮೃತ ಶೀಲಾ ಅವರು ಎಂದಿನಂತೆ ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ಏಕಾಏಕಿಯಾಗಿ ಬಂದ ಕಾಡುಕೋಣ ಇವರ ಮೇಲೆ ದಾಳಿ ಮಾಡಿದೆ. ದಾಳಿಯ ತೀವ್ರತೆಗೆ ಕಾಡುಕೋಣವು ಮಹಿಳೆಯ ಕುತ್ತಿಗೆ ಹಾಗೂ ಹೊಟ್ಟೆಯ ಭಾಗಕ್ಕೆ ಬಲವಾಗಿ ತಿವಿದಿದೆ ಎನ್ನಲಾಗಿದೆ.
ಕಾಡುಕೋಣದ ದಾಳಿಯಿಂದಾಗಿ ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದ ಮಹಿಳೆಯನ್ನು ತಕ್ಷಣವೇ ಚಿಕಿತ್ಸೆಗಾಗಿ ಸ್ಥಳೀಯರು ಆಸ್ಪತ್ರೆಗೆ ಕರೆದೊಯ್ಯುವ ಪ್ರಯತ್ನ ಮಾಡಿದರು. ಆದರೆ, ಗಾಯದ ಪ್ರಮಾಣ ತೀವ್ರವಾಗಿದ್ದರಿಂದ ಆಸ್ಪತ್ರೆಗೆ ತಲುಪುವ ಮಾರ್ಗ ಮಧ್ಯದಲ್ಲಿಯೇ ಅವರು ಕೊನೆಯುಸಿರೆಳೆದಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಸದ್ಯ ಕಳಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ತೋಟದ ಕಾರ್ಮಿಕರ ಮೇಲೆ ಸರಣಿ ದಾಳಿಗಳು ನಡೆಯುತ್ತಿರುವುದರಿಂದ ಸ್ಥಳೀಯ ಗ್ರಾಮಸ್ಥರು ಹಾಗೂ ತೋಟದ ಕಾರ್ಮಿಕರಲ್ಲಿ ತೀವ್ರ ಆತಂಕ ಮನೆಮಾಡಿದೆ. ಕಾಡುಪ್ರಾಣಿಗಳ ಹಾವಳಿಗೆ ಶಾಶ್ವತ ಪರಿಹಾರ ಒದಗಿಸಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.















Leave a Reply